ಲಖನೌ: ದೇಶದಾದ್ಯಂತ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ಬೇರೆ ರಾಜ್ಯಗಳಿಂದ ಉತ್ತರ ಪ್ರದೇಶಕ್ಕೆ ವಾಪಸಾದ ವಲಸೆ ಕಾರ್ಮಿಕರ ಮೇಲೆ ಸೋಂಕುನಿವಾರಕ ರಾಸಾಯನಿಕ ಸಿಂಪಡಿಸಲಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೊವೊಂದನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
‘ಈ ದುರಂತದ (ಕೊರೊನಾ/ಕೋವಿಡ್–19) ವಿರುದ್ಧ ನಾವೆಲ್ಲರೂ ಜತೆಯಾಗಿ ಹೋರಾಡುತ್ತಿದ್ದೇವೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಆದರೆ, ದಯವಿಟ್ಟು ಇಂತಹ ಅಮಾನವೀಯ ಕೆಲಸಗಳನ್ನು ಮಾಡಬೇಡಿ. ವಲಸೆ ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕ ಸಿಂಪಡಿಸುವ ಮೂಲಕ ಅವರನ್ನು ಈ ರೀತಿ ನಡೆಸಿಕೊಳ್ಳಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ, ಬದಲಿಗೆ ಅವರ ಆರೋಗ್ಯಕ್ಕೆ ಹೆಚ್ಚಿನ ಹಾನಿ ಉಂಟು ಮಾಡುತ್ತದೆ’ ಎಂದು ಪ್ರಿಯಾಂಕಾ ಉಲ್ಲೇಖಿಸಿದ್ದಾರೆ.
ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಘೋಷಿಸಿದ್ದಾರೆ. ಇದರಿಂದಾಗಿ ದೆಹಲಿ ಸೇರಿದಂತೆ ವಿವಿಧೆಡೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶಕ್ಕೆ ಕರೆತರಲು ಕ್ರಮ ಕೈಗೊಳ್ಳಲಾಗಿದೆ. ಊರು ಸೇರಲಾರದೆ ಗಡಿ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಲು ಅನುವಾಗುವ ನಿಟ್ಟಿನಲ್ಲಿ 1,000 ಬಸ್ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.