ನವದೆಹಲಿ: ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ಬಾಕಿ ಇರುವ ಪ್ರಕರಣಗಳ ವಿಚಾರಣೆ ಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಆದೇಶ ನೀಡುವ ಇಂಗಿತವನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದೆ. ಇದಕ್ಕೆ ಸಂಬಂಧಿಸಿ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಹೈಕೋರ್ಟ್ಗಳಿಗೆ ಸೂಚನೆ ನೀಡುವ ಸಾಧ್ಯತೆ ಇದೆ.
ಬಾಕಿ ಇರುವಪ್ರಕರಣಗಳ ವಿಲೇವಾರಿ ಹೇಗೆ ಎಂಬ ನೀಲನಕ್ಷೆ ರೂಪಿ ಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೇಳಲಾಗುವುದು ಎಂದು ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಸೂರ್ಯಕಾಂತ್ ಮತ್ತು ಹೃಷಿಕೇಷ್ ರಾಯ್ ಅವರ ಪೀಠವು ಹೇಳಿದೆ.
ಪ್ರಕರಣಗಳು ಕಾಲಮಿತಿಯೊಳಗೆ ವಿಲೇವಾರಿ ಆಗಬೇಕು ಎಂದು ಕೇಂದ್ರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೂ ಹೇಳಿದರು.
ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಒಂದೇ ನ್ಯಾಯಾಲಯಕ್ಕೆ ವಹಿಸಿರುವುದರ ಬಗ್ಗೆಯೂ ಪೀಠವು ಕಳವಳ ವ್ಯಕ್ತಪಡಿಸಿತು. ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಒಂದೊಂದು ಜಿಲ್ಲೆಯಲ್ಲಿ ಒಂದೊಂದು ನ್ಯಾಯಾಲಯವನ್ನು ನಿಯೋಜಿಸಬೇಕು. ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುವ ನ್ಯಾಯಾಲಯಗಳಿಗೆ ಸಂಬಂಧಿಸಿ ಏಕರೂಪತೆಯೂ ಇಲ್ಲ ಎಂದು ನ್ಯಾಯಾಲಯದ ಸಹಾಯಕರಾಗಿರುವ (ಆಮಿಕಸ್ ಕ್ಯೂರಿ) ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಹೇಳಿದರು. ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳ ವಿರುದ್ಧ 4,442 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ ಎಂಬುದನ್ನೂ ನ್ಯಾಯಾಲಯವು ಗಣನೆಗೆ ತೆಗೆದುಕೊಂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.