ನವದೆಹಲಿ: ದೀಪಾವಳಿ ಹಬ್ಬದ ವೇಳೆ ದೆಹಲಿ-ಎನ್ಸಿಆರ್ ವ್ಯಾಪ್ತಿಯಲ್ಲಿ ಹಸಿರು ಪಟಾಕಿ ಮಾರಾಟ ಮಾಡಲು ಮತ್ತು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.
ಹಬ್ಬಗಳ ಸಮಯದಲ್ಲಿ ಹಸಿರು ಪಟಾಕಿ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವಂತೆ ಕೇಂದ್ರ ಹಾಗೂ ದೆಹಲಿ ಸರ್ಕಾರಗಳು ಸುಪ್ರೀಂ ಕೊರ್ಟ್ಗೆ ಮನವಿ ಮಾಡಿದ್ದವು.
ಸಿಜೆಐ ಬಿ.ಆರ್.ಗವಾಯಿ ಹಾಗೂ ನ್ಯಾ. ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಹಸಿರು ಪಟಾಕಿ ಮೇಲಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ.
‘ದೀಪಾವಳಿ ಪ್ರಯುಕ್ತ ಅ.18 ರಿಂದ ಅ.21ರವರೆಗೆ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದೆ. ಈ ವೇಳೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಾಲಿನ್ಯ ಮಟ್ಟವನ್ನು ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಲಾಗಿದೆ’ ಎಂದು ಸುಪ್ರೀಂ ಕೊರ್ಟ್ ತಿಳಿಸಿದೆ.
ದೆಹಲಿಯೊಳಗೆ ಅಕ್ರಮವಾಗಿ ಪಟಾಕಿಗಳನ್ನು ತರಲಾಗುತ್ತಿದೆ. ಹಸಿರು ಪಟಾಕಿಗಳಿಗಿಂತ ಅವು ಪರಿಸರಕ್ಕೆ ಹೆಚ್ಚಿನ ಹಾನಿ ಮಾಡುತ್ತವೆ. ಪರಿಸರಕ್ಕೆ ಹಾನಿಯಾಗದ ರೀತಿಯ ಕ್ರಮವನ್ನು ನಾವು ಕೈಗೊಳ್ಳುತ್ತಿದ್ದೇವೆ ಎಂದು ಸಿಜೆಐ ಬಿ.ಆರ್.ಗವಾಯಿ ತಿಳಿಸಿದ್ದಾರೆ.
ದೆಹಲಿಯ ಹೊರಗಡೆ ತಯಾರಾಗುವ ಪಟಾಕಿಗಳನ್ನು ಇಲ್ಲಿ ಮಾರುವಂತಿಲ್ಲ. ಒಂದು ವೇಳೆ ಇಂತಹ ಪ್ರಕರಣಗಳು ಪತ್ತೆಯಾದರೆ, ಮಾರಾಟಗಾರರ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಪೀಠ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.