
ತಮಿಳುನಾಡಿನ ಡಿಎಂಕೆ ನಾಯಕರು
ಚೆನ್ನೈ: ಕೇಂದ್ರ ಸರ್ಕಾರದ ವಿರುದ್ಧ ದಾಳಿಯನ್ನು ತೀವ್ರಗೊಳಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ, ಇತ್ತೀಚೆಗೆ ಮಂಡಿಸಲಾದ ಕೇಂದ್ರ ಬಜೆಟ್ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಸಾಂಕೇತಿಕ ‘ಹಲ್ವಾ ಅಭಿಯಾನ’ವನ್ನು ಆರಂಭಿಸಿದೆ.
ಡಿಎಂಕೆ ನಾಯಕರು, ಕಾರ್ಯಕರ್ತರು ‘ಹಲ್ವಾ’ ವಿತರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ತಮಿಳುನಾಡಿನಲ್ಲಿ ‘ಹಲ್ವಾ’ ಪದವನ್ನ ಮೋಸ, ವಂಚನೆ ಎಂಬರ್ಥದಲ್ಲಿ ಬಳಸಲಾಗುತ್ತದೆ. ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ರಾಜ್ಯದ ಅಭಿವೃದ್ಧಿಗೆ ಕಡಿಮೆ ಪ್ರಮಾಣದಲ್ಲಿ ಅನುದಾನ ಹಂಚಿಕೆ ಮಾಡಿದೆ ಎಂದು ಡಿಎಂಕೆ ಆರೋಪಿಸಿದೆ.
ಪ್ರತಿಭಟನೆಯ ಭಾಗವಾಗಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಡಿಎಂಕೆ ನಾಯಕರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತಮಿಳುನಾಡಿನ ಜನರಿಗೆ ದ್ರೋಹ ಮಾಡಿದೆ’ ಎಂದು ದೂರಿದ್ದಾರೆ.
‘ಕೇಂದ್ರ ಬಜೆಟ್ ಸ್ಪಷ್ಟ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ರಾಜ್ಯಕ್ಕೆ ಏನನ್ನೂ ನೀಡದೆ, ರಾಜ್ಯದ ಏಳು ಕೋಟಿ ಜನರಿಗೆ ‘ಹಲ್ವಾ’ ನೀಡಿದ್ದಾರೆ’ ಎಂದು ಡಿಎಂಕೆ ವಕ್ತಾರರು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಬಜೆಟ್ ರಾಜ್ಯಕ್ಕೆ ಯಾವುದೇ ಮಹತ್ವದ ಯೋಜನೆಗಳು ಸೇರಿದಂತೆ ಅನುದಾನ ಮೀಸಲಿಡುವಲ್ಲಿ ವಿಫಲವಾಗಿದೆ ಎಂದು ಡಿಎಂಕೆ ಆರೋಪಿಸಿದೆ.
ಕೇಂದ್ರದ ಬಿಜೆಪಿ ಸರ್ಕಾರದ ನಡೆಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ನಮ್ಮ ರಾಜ್ಯದ ಹಕ್ಕುಗಳು ಮತ್ತು ಅಗತ್ಯಗಳನ್ನು ನಿರಂತರವಾಗಿ ನಿರ್ಲಕ್ಷಿಸಿರುವ ಬಿಜೆಪಿ ಇಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.