ADVERTISEMENT

ದೆಹಲಿಯ ಆಡಳಿತಾತ್ಮಕ ಸೇವೆಗಳ ಮೇಲೆ ನಿಯಂತ್ರಣ: ಕೇಂದ್ರದ ಸುಗ್ರೀವಾಜ್ಞೆಗೆ ಡಿಎಂಕೆ ವಿರೋಧ

ಕೇಜ್ರಿವಾಲ್‌ಗೆ ತಮಿಳುನಾಡು ಮುಖ್ಯಮಂತ್ರಿಯಿಂದ ಬೆಂಬಲ

ಪಿಟಿಐ
Published 1 ಜೂನ್ 2023, 15:42 IST
Last Updated 1 ಜೂನ್ 2023, 15:42 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಎದುರುಗೊಂಡರು     –ಪಿಟಿಐ ಚಿತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಎದುರುಗೊಂಡರು     –ಪಿಟಿಐ ಚಿತ್ರ   

ಚೆನ್ನೈ: ದೆಹಲಿಯ ಆಡಳಿತಾತ್ಮಕ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಸರ್ಕಾರವು ತಂದಿರುವ ಸುಗ್ರೀವಾಜ್ಞೆಯನ್ನು ಬಲವಾಗಿ ವಿರೋಧಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಗುರುವಾರ ಹೇಳಿದರು. ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಬಿಕ್ಕಟ್ಟು ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. 

ಚೆನ್ನೈನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಪಂಜಾಬ್‌ ಮುಖ್ಯಮಂತ್ರಿ ಭಗವಾನ್‌ ಮಾನ್‌ ಅವರ ಜೊತೆ ಸಭೆ ನಡೆಸಿದ ಬಳಿಕ ಸ್ಟಾಲಿನ್‌ ಅವರು ಸುದ್ದಿಗಾರರ ಎದುರು ಮಾತನಾಡಿದರು. ‘ಎಎಪಿ ಪಕ್ಷಕ್ಕೆ ಸಂದಿಗ್ಧ ಪರಿಸ್ಥಿತಿ ತಂದೊಡ್ಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಮತ್ತು ಚುನಾಯಿತ ಸರ್ಕಾರವು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅಡ್ಡಿಪಡಿಸುತ್ತಿದೆ. ಎಎಪಿ ಪರವಾಗಿ ಸುಪ್ರೀಂ ಕೋರ್ಟ್‌ ಆದೇಶ ನೀಡಿದ್ದರ ಹೊರತಾಗಿಯೂ ಕೇಂದ್ರವು ಸುಗ್ರೀವಾಜ್ಞೆ ತಂದಿದೆ. ಇದನ್ನು ಡಿಎಂಕೆ ಬಲವಾಗಿ ವಿರೋಧಿಸುತ್ತದೆ’ ಎಂದು ಹೇಳಿದರು.

‘ಕೇಜ್ರಿವಾಲ್‌ ಅವರು ನನ್ನ ಉತ್ತಮ ಸ್ನೇಹಿತರು. ನಮ್ಮ ಸಭೆಯು ಫಲಪ್ರದವಾಯಿತು. ಕೇಂದ್ರದ ಸುಗ್ರೀವಾಜ್ಞೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ ಮತ್ತು ನಾಯಕರು ಎಎಪಿಗೆ ಬೆಂಬಲ ನೀಡಬೇಕು’ ಎಂದು ಸ್ಟಾಲಿನ್‌ ಮನವಿ ಮಾಡಿದರು. 

ADVERTISEMENT

ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ವಿಪಕ್ಷಗಳ ವಿರೋಧವನ್ನು ಕ್ರೋಢೀಕರಿಸುವ ಪ್ರಯತ್ನದಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಇದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.