ADVERTISEMENT

ಪಾಕ್ ಗೆದ್ದರೆ ಪಟಾಕಿ ಸಿಡಿಸುವವರ ಡಿಎನ್‌ಎ ಭಾರತೀಯರದ್ದು ಅಲ್ಲ: ಅನಿಲ್ ವಿಜ್

ಪಿಟಿಐ
Published 26 ಅಕ್ಟೋಬರ್ 2021, 10:19 IST
Last Updated 26 ಅಕ್ಟೋಬರ್ 2021, 10:19 IST
ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್
ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್   

ಚಂಡೀಗಢ: 'ಭಾರತದ ವಿರುದ್ಧದ ಟಿ–20 ವಿಶ್ವಕಪ್‌ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ದೇಶದಲ್ಲಿ ಪಟಾಕಿ ಸಿಡಿಸುವವರ ಡಿಎನ್‌ಎ ಭಾರತೀಯರದ್ದಾಗಿರಲು ಸಾಧ್ಯವಿಲ್ಲ' ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

'ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ಗೆದ್ದ ಮೇಲೆ ಭಾರತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುವವರ ಡಿಎನ್‌ಎ ಭಾರತೀಯದ್ದಾಗಿರಲು ಸಾಧ್ಯವಿಲ್ಲ. ನಮ್ಮ ಮನೆಯಲ್ಲೇ ಅಡಗಿರುವ 'ದೇಶದ್ರೋಹಿ'ಗಳ ಬಗ್ಗೆ ಎಚ್ಚರದಿಂದಿರಿ ಎಂದು ವಿಜ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಭಾನುವಾರ (ಅ.24) ದುಬೈನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ 10 ವಿಕೆಟ್‌ಗಳ ಜಯ ದಾಖಲಿಸಿತ್ತು. ಹೀಗಾಗಿ ಪಾಕ್ ಗೆಲುವಿಗೆ ಕೆಲವು ಕಾಶ್ಮೀರಿ ವಿದ್ಯಾರ್ಥಿಗಳು ಸಂಭ್ರಮಾಚರಿಸಿದ್ದಾರೆ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ಈ ಹೇಳಿಕೆ ನೀಡಿದ್ದಾರೆ.

ADVERTISEMENT

ಈ ಮಧ್ಯೆ, ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ವಿಜಯ ಸಾಧಿಸಿದ್ದಕ್ಕಾಗಿ ಸಂಭ್ರಮಾಚರಿಸಿದ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪಂದ್ಯದ ನಂತರ ವ್ಯಕ್ತಿಗಳ ಗುಂಪೊಂದು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಸಂಭಾ ಜಿಲ್ಲೆಯಲ್ಲಿ ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.