ADVERTISEMENT

ಭಾರತದ ಚುನಾವಣೆ ಬಗ್ಗೆ ವಿಶ್ವಸಂಸ್ಥೆ ಅಧಿಕಾರಿ ಹೇಳಿಕೆ: ಸಚಿವ ಜೈಶಂಕರ್‌ ತಿರುಗೇಟು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಏಪ್ರಿಲ್ 2024, 3:17 IST
Last Updated 5 ಏಪ್ರಿಲ್ 2024, 3:17 IST
ಎಸ್‌. ಜೈಶಂಕರ್‌
ಎಸ್‌. ಜೈಶಂಕರ್‌    

ತಿರುವನಂತಪುರ: ಭಾರತದಲ್ಲಿನ ಚುನಾವಣೆಗಳ ಕುರಿತು ವಿಶ್ವಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಇತ್ತೀಚಿಗೆ ನೀಡಿದ್ದ ಹೇಳಿಕೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ದೇಶದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿರಬೇಕು ಎಂದು ಜಾಗತಿಕ ಸಂಸ್ಥೆ ಹೇಳುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಭಾರತದಲ್ಲಿ, ಜನರ ರಾಜಕೀಯ ಮತ್ತು ನಾಗರಿಕ ಹಕ್ಕುಗಳನ್ನು ರಕ್ಷಿಸಲಾಗಿದೆ. ಪ್ರತಿಯೊಬ್ಬರೂ ಮುಕ್ತ ಮತ್ತು ನ್ಯಾಯಯುತವಾಗಿ ಮತ ಚಲಾಯಿಸಲು ಸಾಧ್ಯವಾಗುತ್ತದೆ ಎಂದರು.

ತಿರುವನಂತಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಾಜೀವ್‌ ಚಂದ್ರಶೇಖರ್‌ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದ ಜೈ ಶಂಕರ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ADVERTISEMENT

ನಮ್ಮ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿರಬೇಕು ಎಂದು ವಿಶ್ವಸಂಸ್ಥೆ ಹೇಳುವ ಅಗತ್ಯವಿಲ್ಲ. ನಮ್ಮ ಬಳಿ ಭಾರತದ ಜನರಿದ್ದಾರೆ. ಭಾರತದ ಜನರು ಯಾವಾಗಲೂ ನ್ಯಾಯಯುತವಾಗಿಯೇ ಇರುತ್ತಾರೆ. ಆದ್ದರಿಂದ, ಅದರ ಬಗ್ಗೆ ಚಿಂತಿಸಬೇಡಿ ಎಂದರು.

ಕಳೆದ ವಾರ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಮತ್ತು ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳ ಮೇಲಿನ ನಿರ್ಬಂಧ ಸೇರಿದಂತೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತಾಗಿ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಸ್ಟೀಫನ್ ಡುಜಾರಿಕ್ ಅವರು, ‘ಚುನಾವಣೆಗಳು ನಡೆಯುವ ಇತರ ದೇಶಗಳಂತೆ ಭಾರತದಲ್ಲಿಯೂ ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆ ನಡೆಯಲಿದೆ ಎಂದು ಭಾವಿಸುತ್ತೇವೆ’ ಎಂದು ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.