ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ 'ಶಿವಲಿಂಗ' ಪತ್ತೆ ಕುರಿತಂತೆ ಹೇಳಿಕೆಗಳನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ.
ಭಾರತೀಯ ದಂಡ ಸಂಹಿತೆ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಮೇಲೆ ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧಾರ್ಮಿಕ ಭಾವನೆಗಳು, ಧರ್ಮವನ್ನು ಅವಮಾನಿಸುವ ಕೃತ್ಯ) ಅಡಿಯಲ್ಲಿ ಲಾಲ್ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿಯ ಉತ್ತರ ಸೈಬರ್ ಪೊಲೀಸರು ತಿಳಿಸಿದ್ದಾರೆ.
ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ವಕೀಲ ವಿನೀತ್ ಜಿಂದಾಲ್ ಅವರು ತಮ್ಮ ದೂರಿನಲ್ಲಿ, ಲಾಲ್ ಇತ್ತೀಚೆಗೆ ‘ಶಿವಲಿಂಗ ಪತ್ತೆ ಕುರಿತಾಗಿ ಪ್ರಚೋದನಕಾರಿ ಟ್ವೀಟ್’ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.
‘ಧರ್ಮ ಮತ್ತು ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ದುರುದ್ದೇಶಪೂರಿತ ಪೋಸ್ಟ್ ಹಾಕಿರುವ ಕುರಿತು ಲಾಲ್ ವಿರುದ್ಧ ಮಂಗಳವಾರ ರಾತ್ರಿ ದೂರು ಸ್ವೀಕರಿಸಲಾಗಿದೆ’ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.
ತಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿರುವ ಲಾಲ್, ‘ಭಾರತದಲ್ಲಿ, ನೀವು ಯಾವುದರ ಬಗ್ಗೆ ಮಾತನಾಡಿದರೂ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರ ಮತ್ತು ಹಲವಾರು ಅವಲೋಕನಗಳನ್ನು ಮಾಡಿದ್ದೇನೆ. ಈಗಲೂ ನನ್ನ ಪೋಸ್ಟ್ನಲ್ಲಿ ಅದೇ ಮಾಡಿದ್ದೇನೆ. ನಾನು ನನ್ನನ್ನು ರಕ್ಷಿಸಿಕೊಳ್ಳುತ್ತೇನೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.