ಕಾಞಂಗಾಡು(ಕೇರಳ): ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾದ (ಡಿವೈಎಫ್ಐ) ಕಾರ್ಯಕರ್ತರೊಬ್ಬರನ್ನು ಗುಂಪೊಂದು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಉತ್ತರ ಕೇರಳದ ಕಾಞಂಗಾಡಿನ ಕಲ್ಲೊರವಿಯಲ್ಲಿ ನಡೆದಿದೆ.
ರೆಹಮಾನ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಎರಡು ಬೈಕಿನಲ್ಲಿ ಭಾವನಗರದತ್ತ ಹೋಗುತ್ತಿದ್ದಾಗ ಆರೋಪಿಗಳು ಅವರನ್ನು ತಡೆದಿದ್ದಾರೆ. ಈ ವೇಳೆ ಆರೋಪಿಯೊಬ್ಬ ಚಾಕುವಿನಿಂದ ರೆಹಮಾನ್ ಅವರ ಎದೆಯನ್ನು ಇರಿದಿದ್ದಾನೆ. ಸ್ಥಳೀಯ ನಿವಾಸಿಗಳು ರೆಹಮಾನ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಈ ಹತ್ಯೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಯಾರನ್ನೂ ಬಂಧಿಸಿಲ್ಲ. ಇದು ರಾಜಕೀಯ ದ್ವೇಷದಿಂದ ನಡೆದ ಹತ್ಯೆಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಐಯುಎಂಎಲ್ನ ಯುವ ಘಟಕ ಕಾರ್ಯಕರ್ತರು ಈ ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.