ನವದೆಹಲಿ: ನ್ಯೂ ಡೆಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮವಾಗಿ ಮತದಾರರ ಪಟ್ಟಿಗೆ ಹೆಸರುಗಳು ಸೇರ್ಪಡೆ ಮತ್ತು ಮತದಾರರ ಹೆಸರುಗಳನ್ನು ಅಳಿಸುತ್ತಿರುವ ಅಕ್ರಮ ಕುರಿತಂತೆ ಆಮ್ ಆದ್ಮಿ ಪಕ್ಷ(ಎಎಪಿ) ನೀಡಿರುವ ದೂರಿನನ್ವಯ ತನಿಖೆ ನಡೆಸುವಂತೆ ದೆಹಲಿ ಮುಖ್ಯ ಚುನಾವಣಾಧಿಕಾರಿಗೆ ಚುನಾವಣಾ ಆಯೋಗ ಸೂಚಿಸಿದೆ.
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕಿ ಆತಿಶಿ ಅವರ ನೇತೃತ್ವದ ನಿಯೋಗ ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ ಕೆಲವು ಗಂಟೆಗಳ ನಂತರ, ಆಯೋಗವು ಸಿಇಒಗೆ ಈ ಆದೇಶ ನೀಡಿದೆ. ಸತ್ಯಾಸತ್ಯತೆ ಪರಿಶೀಲಿಸಿ, ಮಾದರಿ ನೀತಿ ಸಂಹಿತೆಯ ನಿಬಂಧನೆಗಳ ಪ್ರಕಾರ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
‘ಕ್ರಮ ತೆಗೆದುಕೊಂಡ ವರದಿಯನ್ನು ಆಯೋಗಕ್ಕೆ ಕಳುಹಿಸಬೇಕು’ ಎಂದು ಚುನಾವಣಾ ಆಯೋಗವು ಅಧಿಕಾರಿಗೆ ತಿಳಿಸಿದೆ.
ಗುರುವಾರ ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ್ದ ಎಎಪಿ ನಿಯೋಗವು ನ್ಯೂಡೆಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರ್ಮಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ ದೂರು ನೀಡಿದೆ.
ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಅವರು ವರ್ಮಾ ವಿರುದ್ಧ ನೀಡಿರುವ ದೂರಿನ ಪ್ರತಿಯನ್ನು ಪಕ್ಷದ ನಿಯೋಗ ಆಯೋಗಕ್ಕೆ ಸಲ್ಲಿಸಿದೆ.
ಅಲ್ಲದೆ, ನ್ಯೂಡೆಲ್ಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಅಕ್ರಮವಾಗಿ ಹೆಸರುಗಳ ಸೇರ್ಪಡೆ ಮತ್ತು ಅಳಿಸುವಿಕೆಯು ನಡೆದಿದೆ ಎಂದು ಎಎಪಿ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.