ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಅಲ್ಲಿನ ಪೊಲೀಸ್ ಮಹಾನಿರ್ದೇಶಕರನ್ನು (ಡಿಜಿಪಿ) ಬದಲಾಯಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಡಿಜಿಪಿ ವೀರೇಂದ್ರ ಅವರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಕರ್ತವ್ಯ ವಹಿಸಬಾರದು ಎಂದೂ ಆದೇಶದಲ್ಲಿ ಆಯೋಗ ತಿಳಿಸಿದೆ.
ಆದೇಶ ಜಾರಿಗೊಳಿಸಿದ ಬಗ್ಗೆ ಬುಧವಾರ ಬೆಳಿಗ್ಗೆ 10 ಗಂಟೆಯ ಒಳಗಾಗಿ ಮಾಹಿತಿ ನೀಡುವಂತೆಯೂ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
‘ಐಪಿಎಸ್ ಅಧಿಕಾರಿ ವೀರೇಂದ್ರ (ಆರ್ಆರ್–1985) ಅವರ ಬದಲಿಗೆ ಪಿ.ನೀರಜ್ನಯನ್ ಅವರನ್ನು ಪಶ್ಚಿಮ ಬಂಗಾಳದ ಡಿಜಿಪಿ ಮತ್ತು ಐಜಿಪಿಯಾಗಿ ತಕ್ಷಣದಿಂದಲೇ ನೇಮಕ ಮಾಡಲಾಗಿದೆ. ವೀರೇಂದ್ರ ಅವರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಹೊಣೆ ವಹಿಸಬಾರದು. ಆದೇಶವನ್ನು ತಕ್ಷಣವೇ ಜಾರಿಗೊಳಿಸಬಹುದು. ಆದೇಶ ಜಾರಿಗೊಳಿಸಿದ ಬಗ್ಗೆ ಬುಧವಾರ ಬೆಳಿಗ್ಗೆ 10 ಗಂಟೆಯ ಒಳಗಾಗಿ ಆಯೋಗಕ್ಕೆ ಮಾಹಿತಿ ನೀಡಬೇಕು’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ವೀರೇಂದ್ರ ಅವರು ಆಡಳಿತಾರೂಢ ಟಿಎಂಸಿ ಪರ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಇತರ ರಾಜಕೀಯ ಪಕ್ಷಗಳು ಆರೋಪಿಸಿದ್ದವು.
ಈ ಹಿಂದೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ) ಜಾವೇದ್ ಶಮೀಮ್ ಅವರ ಬದಲಿಗೆ ಜಗ್ಮೋಹನ್ ಅವರನ್ನು ಆಯೋಗ ನೇಮಕ ಮಾಡಿತ್ತು.
ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಿಂದ ವಿಧಾನಸಭೆ ಚುನಾವಣೆ ಆರಂಭವಾಗಲಿದ್ದು, 8 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 29ಕ್ಕೆ ಮತದಾನ ಮುಕ್ತಾಯಗೊಳ್ಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.