
ಲಖನೌ: ಉತ್ತರ ಪ್ರದೇಶದಲ್ಲಿ ನಮೂನೆ–7ರ ಮೂಲಕ ಹಿಂದುಳಿದ ವರ್ಗ, ದಲಿತ, ಅಲ್ಪಸಂಖ್ಯಾತ (ಪಿಡಿಎ) ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
‘ಮತದಾನವು ಪ್ರಜಾಪ್ರಭುತ್ವ ನೀಡಿರುವ ಅಮೂಲ್ಯ ಹಕ್ಕು. ಇದರಲ್ಲಿ ಯಾವುದೇ ಅಕ್ರಮ ನಡೆಯಬಾರದು. ಆದರೆ, ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿ ಉತ್ತರ ಪ್ರದೇಶದಲ್ಲಿ ನಮೂನೆ–7ರ (ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಸಲ್ಲಿಸುವ ಅರ್ಜಿ) ಮೂಲಕ ಪಿಡಿಎ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
‘ಮುಖ್ಯಂತ್ರಿ ಕಚೇರಿಯಿಂದಲೇ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಕೆಲವು ಐಎಎಸ್ ಅಧಿಕಾರಿಗಳು ಮುಖ್ಯಮಂತ್ರಿಗಳ ಆದೇಶದಂತೆ ವರ್ತಿಸುತ್ತಿದ್ದಾರೆ. ಚುನಾವಣಾ ಆಯೋಗವು ತನ್ನ ಕಟ್ಟಡದ ಮೇಲೆ ಬಿಜೆಪಿ ಧ್ವಜನು ಹಾರಿಸಲಿ’ ಎಂದು ಅಖಿಲೇಶ್ ಯಾದವ್ ಆಕ್ರೋಶ ವ್ಯಕ್ತಪಡಿಸಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರುವ ಬಿಜೆಪಿಯು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಮೂಲಕ, ಮುಸ್ಲಿಮರು ಮತ್ತು ಪಿಡಿಎ ಸಮುದಾಯದ ಮತಗಳ ವಿಭಜನೆಗೆ ಮುಂದಾಗಿದೆ. ಕನೌಜ್ ಕ್ಷೇತ್ರದಲ್ಲಿ 1,200ಕ್ಕೂ ಹೆಚ್ಚು ಮುಸ್ಲಿಂ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿರುವ ಅಖಿಲೇಶ್, ಚುನಾಣಾ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತಾಗಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.