ನವದೆಹಲಿ: ರಾಜ್ಯದ ಸಿಂದಗಿ ವಿಧಾನಸಭೆ ಕ್ಷೇತ್ರ ಸೇರಿದಂತೆ ದೇಶದಾದ್ಯಂತ ವಿವಿಧ ಕಾರಣಗಳಿಂದ ಖಾಲಿಯಾಗಿರುವ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳಿಗೆ ಸದ್ಯಕ್ಕೆ ಉಪ ಚುನಾವಣೆ ನಡೆಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ.
ಕೋವಿಡ್–19 ದ್ವಿತೀಯ ಅಲೆಯು ಗಂಭೀರ ಪರಿಣಾಮ ಉಂಟು ಮಾಡಿರುವ ಕಾರಣ ಉಪ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ. ಪರಿಸ್ಥಿತಿ ಸಾಮಾನ್ಯ ಹಂತಕ್ಕೆ ಬಂದ ನಂತರ ಈ ಸಂಬಂಧ ತೀರ್ಮಾನ ಕೈಗೊಳ್ಳುವುದಾಗಿ ಆಯೋಗ ಹೇಳಿದೆ.
ದೇಶದ 3 ಲೋಕಸಭೆ ಹಾಗೂ 8 ವಿಧಾನಸಭೆ ಕ್ಷೇತ್ರಗಳು ಖಾಲಿ ಇವೆ. ನಿಯಮಾನುಸಾರ ಖಾಲಿ ಆದ 6 ತಿಂಗಳೊಳಗೆ ಉಪ ಚುನಾವಣೆ ನಡೆಸಬೇಕಿದೆ. ಆದರೆ, ತೀವ್ರವಾಗಿ ಹರಡುತ್ತಿರುವ ಕೋವಿಡ್–19 ಸ್ಥಿತಿ ಸುಧಾರಣೆಯಾದ ನಂತರ ಉಪ ಚುನಾವಣೆ ಹಮ್ಮಿಕೊಳ್ಳುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಅವರ ನಿಧನದಿಂದ ಸಿಂದಗಿ ವಿಧಾನಸಭೆ ಕ್ಷೇತ್ರ ತೆರವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.