ಇ.ಡಿ
ಲಖನೌ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಭಾಗವಾಗಿ ರಾಜ್ಯದ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದ್ದು, ₹750 ಕೋಟಿ ಬ್ಯಾಂಕ್ ಸಾಲ ವಂಚನೆ ಆರೋಪದ ಮೇಲೆ ಉತ್ತರ ಪ್ರದೇಶದ ಮಾಜಿ ಶಾಸಕ ವಿನಯ್ ಶಂಕರ್ ತಿವಾರಿ ಮತ್ತು ಅವರ ಕಂಪನಿಯ ಹಿರಿಯ ಅಧಿಕಾರಿಯೊಬ್ಬರನ್ನು ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸೋಮವಾರ ಸಂಜೆ ತಿವಾರಿ ಅವರನ್ನು ಲಖನೌದಲ್ಲಿ ಬಂಧಿಸಲಾಯಿತು. ಗಂಗೋತ್ರಿ ಎಂಟರ್ಪ್ರೈಸಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅಜೀತ್ ಪಾಂಡೆ ಅವರನ್ನು ಮಹಾರಾಜ್ಗಂಜ್ ಜಿಲ್ಲೆಯಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ತಿವಾರಿ ಅವರನ್ನು ಲಖನೌದ ವಿಶೇಷ ಪಿಎಂಎಲ್ಎ ನ್ಯಾಯಾಲಯದ ಮುಂದೆ ಸೋಮವಾರ ಹಾಜರುಪಡಿಸಲಾಗಿದ್ದು, ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಇಂದು (ಮಂಗಳವಾರ) ತಿವಾರಿ ಮತ್ತು ಪಾಂಡೆಯನ್ನು ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಜಾರಿ ನಿರ್ದೇನಾಲಯ ತನ್ನ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ.
ಆರೋಪಿಗಳು 2012 ರಿಂದ 2016ರ ನಡುವೆ ಬ್ಯಾಂಕ್ ಆಫ್ ಇಂಡಿಯಾ (ಬಿಒಐ) ನೇತೃತ್ವದ ಬ್ಯಾಂಕುಗಳ ಒಕ್ಕೂಟದಲ್ಲಿ ಸುಮಾರು ₹750 ಕೋಟಿ ಬ್ಯಾಂಕ್ ಸಾಲ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.