ನವದೆಹಲಿ: ‘ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚಾರ್ ವಿರುದ್ಧ ಒತ್ತಾಯಪೂರ್ವಕವಾಗಿ ಯಾವುದೇ ಕ್ರಮ ಜರುಗಿಸುವುದಿಲ್ಲ’ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿತು.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸಂಬಂಧ ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಹೃಷಿಕೇಷನ್ ರಾಯ್ ಅವರೂ ಪೀಠದಲ್ಲಿದ್ದರು.
ಈ ಪ್ರಕರಣದಲ್ಲಿ ಪತಿ ದೀಪಕ್ ಕೊಚ್ಚಾರ್ ಅವರನ್ನು ಬಂಧಿಸಿರುವ ಇ.ಡಿ ಕ್ರಮವನ್ನು ಪ್ರಶ್ನಿಸಿ ಚಂದಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ಪೀಠವು ತಿಳಿಸಿತು. ಇ.ಡಿ ಈ ಪ್ರಕರಣದಲ್ಲಿ ಕೊಚ್ಚಾರ್ ದಂಪತಿ ಹಾಗೂ ವಿಡಿಯೊಕಾನ್ ಸಮೂಹದ ಪ್ರವರ್ತಕ ವೇಣುಗೋಪಾಲ್ ಧೂತ್ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.