ನವದೆಹಲಿ:ದೆಹಲಿ ಗಲಭೆಗಳಿಗೆ ಹಣಕಾಸು ನೆರವು ನೀಡಿದ ಆರೋಪ ಹಾಗೂ ಹಣಕಾಸು ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿಯಿಂದ (ಎಎಪಿ) ಈಗ ಅಮಾನತುಗೊಂಡಿರುವ ಕೌನ್ಸಿಲರ್ ತಾಹಿರ್ ಹುಸೇನ್, ಇಸ್ಲಾಮಿಕ್ಸಂಘಟನೆ ಪಿಎಫ್ಐ ಹಾಗೂ ಇತರರ ವಿರುದ್ಧ ಅನುಷ್ಠಾನ ನಿರ್ದೇಶನಾಲಯವು ಪ್ರಕರಣ ದಾಖಲಿಸಿದೆ.
ಕಳೆದ ತಿಂಗಳು ಈಶಾನ್ಯ ದೆಹಲಿಯಲ್ಲಿ ನಡೆದ ಸಿಎಎಗೆ ಸಂಬಂಧಿಸಿದಂತೆ ಹಿಂಸಾತ್ಮಕ ಪ್ರತಿಭಟನೆ ನಡೆದು 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು ಹಾಗೂ ಕೋಟ್ಯಂತರ ರೂಪಾಯಿ ಆಸ್ತಿ ಪಾಸ್ತಿ ನಷ್ಟವಾಗಿತ್ತು. ಈ ಸಂದರ್ಭ ಗುಪ್ತದಳದ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಲೆ ಮಾಡಿ ಚರಂಡಿಗೆ ಎಸೆಯಲಾಗಿತ್ತು. ಈ ಪ್ರಕರಣದ ಆರೋಪಿಯಾಗಿರುವ ತಾಹಿರ್ ಹುಸೇನ್ ವಿರುದ್ಧ ಹಣ ಅಕ್ರಮ ವರ್ಗಾವಣೆ (ಪಿಎಂಎಲ್ಎ) ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ವಿರುದ್ಧವೂ ಇದೇ ರೀತಿಯ ಪ್ರಕರಣ ದಾಖಲಿಸಲಾಗಿದೆ. ಹುಸೇನ್ ಪ್ರಸ್ತುತ ದೆಹಲಿ ಪೊಲೀಸರ ಕಸ್ಟಡಿಯಲ್ಲಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನದ ಸಂದರ್ಭದಲ್ಲಿ ಕೋಮು ಗಲಭೆಗಳನ್ನು ಪ್ರಾಯೋಜಿಸಲು ತಾಹಿರ್ ಹುಸೇನ್, ಪಿಎಫ್ಐ ಹಾಗೂ ಇತರರು ಹಣಕಾಸು ನೆರವಿಗಾಗಿ ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿದ್ದಾರೆ ಎಂಬ ಆರೋಪಗಳ ಕುರಿತು ದೆಹಲಿ ಪೊಲೀಸ್ ಕ್ರೈಮ್ ಬ್ರಾಂಚ್ ಈಗಾಗಲೇ ಎಫ್ಐಆರ್ಗಳನ್ನು ದಾಖಲಿಸಿಕೊಂಡಿದ್ದು, ಅದನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.