ನವದೆಹಲಿ: ‘ತಮ್ಮ ಆಪ್ತ ಸಹಾಯಕ ದೇವೇಂದ್ರ ಶರ್ಮಾ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶೋಧ ನಡೆಸಿದ್ದು, ಅಲ್ಲಿ ಏನೂ ಸಿಗದ ಕಾರಣ ಅವರನ್ನು ಬಂಧಿಸಿದ್ದಾರೆ’ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಶನಿವಾರ ಹೇಳಿದ್ದಾರೆ.
ಈ ಬೆಳವಣಿಗೆಯ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದೂ ಅವರು ಆರೋಪಿಸಿದ್ದಾರೆ.
‘ಇ.ಡಿ ಅಧಿಕಾರಿಗಳು ಸುಳ್ಳು ಮೊಕದ್ದಮೆ ದಾಖಲಿಸಿಕೊಂಡು ನನ್ನ ಮನೆಯಲ್ಲಿ ಶೋಧ ನಡೆಸಿದ್ದರು ಮತ್ತು ಬ್ಯಾಂಕ್ ಲಾಕರ್ ಕೂಡ ಪರಿಶೀಲಿಸಿದ್ದರು. ಆದರೆ ಅವರಿಗೆ ಏನೂ ಸಿಕ್ಕಿರಲಿಲ್ಲ. ಶನಿವಾರ ನನ್ನ ಆಪ್ತ ಸಹಾಯಕನ ಮನೆಯಲ್ಲೂ ಶೋಧ ಕಾರ್ಯ ನಡೆಸಿ, ಏನೂ ಸಿಗದ ಕಾರಣ ಅವರನ್ನು ಬಂಧಿಸಿದ್ದಾರೆ’ ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೇವೇಂದ್ರ ಶರ್ಮಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.
ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಅಡಿಯಲ್ಲಿದೇವೇಂದ್ರ ಶರ್ಮಾ ಅವರನ್ನು ವಿಚಾರಣೆಗೆ ಒಳಪಡಿಸಿ, ಅವರಿಂದ ಹೇಳಿಕೆ ದಾಖಲಿಸಿಕೊಂಡಿದ್ದೇವೆ ಎಂದೂ ವಿವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.