
ನವದೆಹಲಿ: ತೃಣಮೂಲ ಕಾಂಗ್ರೆಸ್ನ ರಾಜಕೀಯ ಸಲಹಾ ಸಂಸ್ಥೆ ‘ಐ–ಪ್ಯಾಕ್’ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿದ ದಾಳಿಗೆ ಸಂಬಂಧಿಸಿದಂತೆ ತನ್ನ ವಾದ ಆಲಿಸದೆ ಯಾವುದೇ ಪ್ರತಿಕೂಲ ಆದೇಶ ಹೊರಡಿಸಬಾರದು ಎಂದು ಕೋರಿ ಪಶ್ಚಿಮ ಬಂಗಾಳ ಸರ್ಕಾರವು ಶನಿವಾರ ಸುಪ್ರೀಂ ಕೋರ್ಟ್ಗೆ ಕೇವಿಯಟ್ ಸಲ್ಲಿಸಿದೆ.
ಬಹುಕೋಟಿ ಮೊತ್ತದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇ.ಡಿ ಅಧಿಕಾರಿಗಳು ಕೋಲ್ಕತ್ತದ ‘ಐ–ಪ್ಯಾಕ್’ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ನಿವಾಸದ ಮೇಲೆ ಗುರುವಾರ ದಾಳಿ ನಡೆಸಿದ್ದರು.
ಶೋಧ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಸ್ಥಳಕ್ಕೆ ಬಂದಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಟಿಎಂಸಿಗೆ ಸಂಬಂಧಿಸಿ ದಾಖಲೆಗಳು’ ಎಂದು ಕೇಳಿ ಕೆಲವು ಕಡತಗಳನ್ನು ಕೊಂಡೊಯ್ದಿದ್ದರು.
ಮಮತಾ ಮತ್ತು ಕೋಲ್ಕತ್ತದ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಇ.ಡಿ ಶುಕ್ರವಾರ, ಕಲ್ಕತ್ತ ಹೈಕೋರ್ಟ್ ಮೊರೆ ಹೋಗಿದೆ.
‘ಮಮತಾ ಅವರು ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಸರ್ಕಾರದ ಉನ್ನತ ಹುದ್ದೆಯಲ್ಲಿರುವವರು ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆ’ ಎಂದು ಆರೋಪಿಸಿದೆ. ಮತ್ತೊಂದೆಡೆ ಇ.ಡಿ ಶೋಧದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಟಿಎಂಸಿ, ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿ ಸುವ್ರಾ ಘೋಷ್ ಅವರು ಎರಡೂ ಕಡೆಯವರ ಅರ್ಜಿಗಳನ್ನು ಜ.14ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದಾರೆ.
ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿರುವವರು ತಮ್ಮ ವಿಚಾರಣೆ ನಡೆಸದೆ ತನ್ನ ವಿರುದ್ಧ ಯಾವುದೇ ಪ್ರತಿಕೂಲ ಆದೇಶ ಹೊರಡಿಸದಂತೆ ನೋಡಿಕೊಳ್ಳಲು ‘ಕೇವಿಯಟ್’ ಅರ್ಜಿಯನ್ನು ಸಲ್ಲಿಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.