ADVERTISEMENT

ಸೇನೆಯ ಜಾಗ ಒತ್ತುವರಿ: ಪಶ್ಚಿಮ ಬಂಗಾಳ, ಜಾರ್ಖಂಡ್‌ನಲ್ಲಿ ಇ.ಡಿ. ಕಾರ್ಯಾಚರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ನವೆಂಬರ್ 2022, 7:39 IST
Last Updated 4 ನವೆಂಬರ್ 2022, 7:39 IST
   

ನವದೆಹಲಿ:ಭಾರತೀಯ ಸೇನೆಗೆ ಸೇರಿದ ಭೂಮಿ ಒತ್ತುವರಿ, ಹಣ ಅಕ್ರಮ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಶುಕ್ರವಾರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ಬಿಧನಗರ್‌ನ ಸಾಲ್ಟ್‌ಲೇಕ್‌ನಲ್ಲಿರುವ ಕೋಲ್ಕತ್ತ ಮೂಲದ ಉದ್ಯಮಿ ಅಮಿತ್‌ ಅಗರವಾಲ್‌ ಅವರ ನಿವಾಸ ಮತ್ತು ಕಚೇರಿ ಆವರಣದಲ್ಲಿಯೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ADVERTISEMENT

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರ ಆಪ್ತರಾಗಿರುವ ಅಮಿತ್‌ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಶೋಧ ನಡೆಸಿದೆ. ಅವರನ್ನು ಅಕ್ಟೋಬರ್‌ 8ರಂದು ಬಂಧಿಸಿತ್ತು.

ಅಕ್ರಮವಾಗಿ ಕಲ್ಲಿದ್ದಲು ಸಾಗಣೆ ಮತ್ತು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಅಮಿತ್‌ ಅವರ ಬಳಿ ಇವೆ ಎಂದು ಇ.ಡಿ ಮೂಲಗಳು ತಿಳಿಸಿವೆ.

ಸೊರೇನ್ ಅವರು ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಸಲುವಾಗಿ ಗುರುವಾರ ಇ.ಡಿ ಎದುರು ಹಾಜರಾಗಬೇಕಿತ್ತು. ಆದರೆ, ಅವರು ವಿಚಾರಣೆಗೆ ತಪ್ಪಿಸಿಕೊಂಡಿದ್ದರು. ಇದಾದ ಮರುದಿನವೇ ಜಾರ್ಖಂಡ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.