ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (ಪಿಎಂಎಲ್ಎ) ಸಂಬಂಧಿಸಿ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ (ಇ.ಡಿ) ತಂಡ ಶನಿವಾರ ಬೆಳಿಗ್ಗೆ ಕಾಂಗ್ರೆಸ್ನ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ಅವರ ನಿವಾಸಕ್ಕೆ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂದೇಸರ ಸಹೋದರರ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ದೆಹಲಿಯ ಮದರ್ ತೆರೇಸಾ ರಸ್ತೆಯಲ್ಲಿರುವ ನಿವಾಸಕ್ಕೆ ಮೂವರು ಸದಸ್ಯರನ್ನೊಳಗೊಂಡ ತಂಡ ತೆರಳಿದ್ದು, ಅಹ್ಮದ್ ಅವರ ಹೇಳಿಕೆ ದಾಖಲಿಸಿಕೊಳ್ಳಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಎರಡು ಬಾರಿ ಪಟೇಲ್ ಅವರಿಗೆ ಇ.ಡಿ ಸಮನ್ಸ್ ನೀಡಿತ್ತು. ಆದರೆ, ಹಿರಿಯ ನಾಗರಿಕರು ಮನೆಯಲ್ಲೇ ಇರಬೇಕೆಂಬ ‘ಕೋವಿಡ್ ಸಾಂಕ್ರಾಮಿಕ ಮಾರ್ಗಸೂಚಿ’ ಅನುಸಾರ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬಗ್ಗೆ ಪಟೇಲ್ ಅವರು ಇ.ಡಿ.ಗೆ ಮನವಿಯನ್ನೂ ಸಲ್ಲಿಸಿದ್ದರು. ಪಟೇಲ್ ಮನವಿಯನ್ನು ಮನ್ನಿಸಿದ್ದ ಇ.ಡಿ ತನಿಖಾಧಿಕಾರಿಯನ್ನು ಕಳುಹಿಸಿಕೊಡುವುದಾಗಿ ಹೇಳಿತ್ತು.
ಗುಜರಾತ್ ಮೂಲದ ಸ್ಟರ್ಲಿಂಗ್ ಬಯೋಟೆಕ್ನಿಂದ ಬ್ಯಾಂಕ್ಗೆ ಬಹುಕೋಟಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.