ನವದೆಹಲಿ: ‘ಭಾರತ ಉನ್ನತ ಶಿಕ್ಷಣ ಆಯೋಗವನ್ನು (ಎಚ್ಇಸಿಐ) ಸ್ಥಾಪಿಸುವ ಸಲುವಾಗಿ ಶಿಕ್ಷಣ ಸಚಿವಾಲಯವು ಮಸೂದೆಯನ್ನು ರೂಪಿಸುವ ಕಾರ್ಯದಲ್ಲಿ ತೊಡಗಿದೆ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಶಿಕ್ಷಣ ಸಚಿವಾಲಯವು ಸಂಪುಟದ ಅನುಮೋದನೆ ಪಡೆದು ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್ಇಪಿ) ಅನ್ನು 2020ರ ಜುಲೈ 29ರಂದು ಘೋಷಿಸಿದೆ. ನೂತನ ನೀತಿಯು, ಭಾರತ ಉನ್ನತ ಶಿಕ್ಷಣ ಆಯೋಗವನ್ನು ಸ್ಥಾಪಿಸುವಂತೆ ಸೂಚಿಸಿದೆ. ನಿಯಂತ್ರಣ, ಮಾನ್ಯತೆ, ಧನಸಹಾಯ ಮತ್ತು ಶೈಕ್ಷಣಿಕ ಗುಣಮಟ್ಟದ ವಿನ್ಯಾಸ ಎನ್ನುವ ನಾಲ್ಕು ಸ್ವತಂತ್ರ ಅಂಗಗಳು ಭಾರತ ಶಿಕ್ಷಣ ಆಯೋಗದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತವೆ’ ಎಂದು ಅವರು ಲಿಖಿತ ಉತ್ತರ ನೀಡಿದ್ದಾರೆ.
ಎನ್ಇಪಿಯ ಪ್ರಕಾರ, ಭಾರತ ಉನ್ನತ ಶಿಕ್ಷಣ ಆಯೋಗವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಶಿಕ್ಷಣ ಸಚಿವಾಲಯವು ಮಸೂದೆಯನ್ನು ರೂಪಿಸುವಲ್ಲಿ ಕಾರ್ಯತತ್ಪರವಾಗಿದೆ. ನೂತನ ಆಯೋಗವು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ), ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮತ್ತು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯಂತಹ (ಎನ್ಸಿಟಿಇ) ಸ್ವಾಯತ್ತ ಸಂಸ್ಥೆಗಳನ್ನು ಬದಲಿಸುವ ಉದ್ದೇಶವನ್ನು ಹೊಂದಿದೆ’ ಎಂದೂ ಪ್ರಧಾನ್ ಅವರು ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಮತ್ತು ಕಾನೂನು ಶಿಕ್ಷಣವನ್ನು ಹೊರತುಪಡಿಸಿ, ಉಳಿದವುಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಅಖಿಲಭಾರತ ಮಟ್ಟದಲ್ಲಿ ಉನ್ನತ ಶಿಕ್ಷಣ ಆಯೋಗವನ್ನು ಸ್ಥಾಪಿಸುವಂತೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಶಿಫಾರಸು ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.