
ಏಕನಾಥ್ ಶಿಂದೆ
ಮುಂಬೈ (ಪಿಟಿಐ): ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಂವಾದ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಆಹ್ವಾನಿಸಿದ್ದರಲ್ಲಿ ತಪ್ಪೇನಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.
ಆರ್ಎಸ್ಎಸ್ ನಿಲುವನ್ನು ಸಮರ್ಥಿಸಿಕೊಂಡಿರುವ ಅವರು, ‘ಸಲ್ಮಾನ್ ಖಾನ್ ಒಬ್ಬ ಭಾರತೀಯ ಪ್ರಜೆಯಾಗಿದ್ದು, ದೇಶದ ಸಂಸ್ಕೃತಿ, ಪರಂಪರೆಗಳ ಮೇಲೆ ನಂಬಿಕೆ ಹೊಂದಿದ್ದಾರೆ’ ಎಂದೂ ಪ್ರತಿಪಾದಿಸಿದ್ದಾರೆ.
ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಮುಂಬೈನಲ್ಲಿ ಭಾಗವತ್ ಅವರೊಂದಿಗಿನ ಸಂವಾದ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಸಲ್ಮಾನ್ ಖಾನ್ ಸೇರಿದಂತೆ ಹಲವು ಬಾಲಿವುಡ್ ತಾರೆಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ್ದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್, ‘ಇದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ನೀಡುತ್ತಿರುವ ಸ್ವಾಗತವೋ ಅಥವಾ ಸಂಘ ಮತ್ತು ಅದರ ಶಾಖೆಗಳಿಗೆ ಮುಸ್ಲಿಮರನ್ನೂ ಸ್ವಾಗತಿಸಲು ನೀಡುತ್ತಿರುವ ಸಂದೇಶವೋ’ ಎಂದು ಪ್ರಶ್ನಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಶಿಂದೆ, ಸಲ್ಮಾನ್ ಅವರನ್ನು ಆಹ್ವಾನಿಸಿದ್ದರಲ್ಲಿ ತಪ್ಪೇನಿದೆ ಎಂದಿದ್ದಾರೆ. ಜತೆಗೆ ‘ಆರ್ಎಸ್ಎಸ್ ಒಂದು ದೇಶಭಕ್ತ ಸಂಘಟನೆಯಾಗಿದ್ದು, ಅದರ ಕಾರ್ಯಕರ್ತರ ಕಣ ಕಣದಲ್ಲಿಯೂ ದೇಶಭಕ್ತಿ ಇದೆ’ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.