ಏಕನಾಥ ಶಿಂದೆ ಮತ್ತು ಕುನಾಲ್ ಕಾಮ್ರಾ
ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ವಿರುದ್ಧ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಮೂರು ಹೊಸ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.
ಜಲಗಾಂವ್ ನಗರದ ಮೇಯರ್, ನಾಸಿಕ್ನ ಹೋಟೆಲ್ ಉದ್ಯಮಿ ಹಾಗೂ ಮತ್ತೊಬ್ಬ ಉದ್ಯಮಿ ನೀಡಿದ ದೂರು ಆಧರಿಸಿ ಕುನಾಲ್ ಕಾಮ್ರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಕಾಮ್ರಾ ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಗೈರಾಗಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
36 ವರ್ಷದ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಈಚೆಗೆ ಕಾರ್ಯಕ್ರಮವೊಂದರಲ್ಲಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕರೆಯುವ ಮೂಲಕ ರಾಜಕೀಯ ವೃತ್ತಿಜೀವನವನ್ನು ಟೀಕಿಸಿದ್ದರು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು.
ಕಾಮ್ರಾ ಅವರ ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ದಾಂದಲೆ ನಡೆಸಿದ ಆರೋಪದ ಅಡಿ ಪೊಲೀಸರು ಶಿವಸೇನಾ ಪದಾಧಿಕಾರಿ ರಾಹುಲ್ ಕನಲ್ ಮತ್ತು 11 ಮಂದಿ ಇತರರನ್ನು ಬಂಧಿಸಿದ್ದಾರೆ.
‘ನಾನು 2021ರಲ್ಲೇ ಮುಂಬೈನಿಂದ ತಮಿಳುನಾಡಿಗೆ ವಾಸ ಬದಲಿಸಿದ್ದು, ಅಂದಿನಿಂದ ಈ ರಾಜ್ಯದ ನಿವಾಸಿ ಆಗಿದ್ದೇನೆ. ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗುವ ಭೀತಿಯಲ್ಲಿದ್ದೇನೆ’ ಎಂದು ಹೇಳಿ ಕಾಮ್ರಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಕಾಮ್ರಾಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.