ADVERTISEMENT

ಬಿಜೆಪಿ ಅಭ್ಯರ್ಥಿಯನ್ನು 'ಐಟಂ' ಎಂದಿದ್ದ ಕಮಲ್‌ನಾಥ್‌ಗೆ ಚುನಾವಣೆ ಆಯೋಗ ನೊಟೀಸ್

ಪಿಟಿಐ
Published 21 ಅಕ್ಟೋಬರ್ 2020, 15:14 IST
Last Updated 21 ಅಕ್ಟೋಬರ್ 2020, 15:14 IST
ಕಾಂಗ್ರೆಸ್ ಮುಖಂಡ ಕಮಲ್ ನಾಥ್
ಕಾಂಗ್ರೆಸ್ ಮುಖಂಡ ಕಮಲ್ ನಾಥ್   

ಭೋಪಾಲ್: ಬಿಜೆಪಿಯ ಅಭ್ಯರ್ಥಿ ಇಮಾರ್ತಿ ದೇವಿ ಅವರನ್ನು 'ಐಟಂ' ಎಂದು ಕರೆದಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ನೀಡಿದ್ದು, ಉಪಚುನಾವಣೆ ನಡೆಯುವ ವೇಳೆ ರಾಜ್ಯದಲ್ಲಿ ಜಾರಿಯಲ್ಲಿರುವ ಮಾದರಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಹೇಳಿದೆ.

'ನೊಟೀಸ್ ಸ್ವೀಕರಿಸಿದ 48 ಗಂಟೆಗಳ ಒಳಗೆ ಮೇಲಿನ ಹೇಳಿಕೆಯನ್ನು ನೀಡಿರುವ ನಿಮ್ಮ ನಿಲುವನ್ನು ವಿವರಿಸಲು ಆಯೋಗವು ನಿಮಗೆ ಅವಕಾಶವನ್ನು ನೀಡುತ್ತದೆ, ಒಂದು ವೇಳೆ ಅದು ವಿಫಲವಾದರೆ ಭಾರತದ ಚುನಾವಣಾ ಆಯೋಗವು ಯಾವುದೇ ಸೂಚನೆ ನೀಡದೆಯೇ ನಿರ್ಧಾರ ತೆಗೆದುಕೊಳ್ಳುತ್ತದೆ' ಎಂದು ನೊಟೀಸ್‌ನಲ್ಲಿ ತಿಳಿಸಲಾಗಿದೆ.

ದಬ್ರಾ ಟೌನ್ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ ಪರ ಭಾನುವಾರ ಪ್ರಚಾರ ಕೈಗೊಂಡಿದ್ದ ಕಮಲನಾಥ್‌, 'ನಮ್ಮ ಅಭ್ಯರ್ಥಿ ಅತ್ಯಂತ ಸರಳ ವ್ಯಕ್ತಿ. ಅವರಂತೆ (ಇಮಾರ್ತಿ ದೇವಿ) ಐಟಂ' ಅಲ್ಲ ಎಂದು ಗೇಲಿ ಮಾಡಿದ್ದರು. ಈ ಕ್ಷೇತ್ರದಲ್ಲಿ ಇಮಾರ್ತಿ ದೇವಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ADVERTISEMENT

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಕಮಲ್ ನಾಥ್ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ಸೋಮವಾರ ಪ್ರತಿಭಟನೆ ಕೈಗೊಂಡಿದ್ದರು. ರಾಷ್ಟ್ರೀಯ ಮಹಿಳಾ ಆಯೋಗವು ಈ ಹೇಳಿಕೆಗೆ ಕಾಂಗ್ರೆಸ್ ಮುಖಂಡರಿಂದ ವಿವರಣೆ ಕೇಳಿತ್ತು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕಮಲ್ ನಾಥ್, ನಂತರ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದರು ಮತ್ತು ಅವರು ಯಾರೊಬ್ಬರಿಗೂ ಅಗೌರವ ತೋರುವ ಉದ್ದೇಶದಿಂದ ಏನನ್ನೂ ಹೇಳಲಿಲ್ಲ. ಹೀಗಾಗಿ ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಮಧ್ಯಪ್ರದೇಶದ 28 ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯ ಕೈಗೊಂಡಿವೆ. ಇದೇ ವೇಳೆ ಕಮಲ್ ನಾಥ್ ಬಿಜೆಪಿ ಅಭ್ಯರ್ಥಿಯನ್ನು ಗೇಲಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.