ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ನ್ಯಾಯಾಲಯ ಸಂಕೀರ್ಣದ ಬಳಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್ಕೌಂಟರ್ ದಾಳಿಯಲ್ಲಿ ಇಬ್ಬರು ಲಷ್ಕರ್-ಇ-ತೊಯ್ಯಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಬುದ್ಗಾಮ್ನಲ್ಲಿ ಭಯೋತ್ಪಾದಕರ ಚಟುವಟಿಕೆ ಬಗ್ಗೆ ಇದ್ದ ನಿರ್ದಿಷ್ಟ ಮಾಹಿತಿ ಆಧರಿಸಿ ಸೇನೆ ಮತ್ತು ಪೋಲೀಸರ ಜಂಟಿ ಕಾರ್ಯಾಚರಣೆ ನಡೆಸಿ, ನ್ಯಾಯಾಲಯದ ಸಂಕೀರ್ಣದ ಬಳಿ ಶಂಕಿತ ವಾಹನವೊಂದನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಭಯೋತ್ಪಾದಕರು ಗುಂಡು ಹಾರಿಸಿದರು. ಆಗ ಭದ್ರತಾ ಸಿಬ್ಬಂದಿ ಪ್ರತಿ ಗುಂಡಿನ ದಾಳಿ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು. ಆದರೆ ಕೆಲ ಉಗ್ರಗಾಮಿಗಳು ತಪ್ಪಿಸಿಕೊಂಡಿದ್ದಾರೆ’ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಮೃತ ಭಯೋತ್ಪಾದಕರನ್ನು ಪುಲ್ವಾಮಾ ಜಿಲ್ಲೆಯ ಅರ್ಬಾಜ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದೆ. ಸಮೀಪದ ಮಗಮ್ ಪ್ರದೇಶದಲ್ಲಿ ಕಳೆದ ವಾರ ಇಬ್ಬರು ಭಯೋತ್ಪಾದಕರು ತಪ್ಪಿಸಿಕೊಂಡಿದ್ದರು ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.
ಹತ್ಯೆಯಾದ ಉಗ್ರರಿಂದ ಎಕೆ ರೈಫಲ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.