ಸೇಲಂ: ತಮಿಳುನಾಡಿನಲ್ಲಿ ಎಐಎಡಿಎಂಕೆ ಮಾಜಿ ಸಚಿವ ಕೆ.ಟಿ. ರಾಜೇಂದ್ರ ಬಾಲಾಜಿ ಅವರು ಕಳೆದ ವರ್ಷ ಸರ್ಕಾರಿ ಹಾಲಿನ ಉತ್ಪಾದಕ 'ಆವಿನ್' ಘಟಕದಿಂದ ಸರಿ ಸುಮಾರು 1.50 ಟನ್ ಸಿಹಿ ತಿನಿಸುಗಳನ್ನು ತೆಗೆದುಕೊಂಡು ಹೋಗಿದ್ದರು ಎಂದು ಹೈನುಗಾರಿಕೆಸಚಿವ ಎಸ್. ಎಂ. ನಾಸರ್ ಭಾನುವಾರ ಆರೋಪಿಸಿದ್ದಾರೆ.
ಈ ಆರೋಪಕ್ಕೆ ಸಂಬಂಧಿಸಿದಂತೆ ಬೇಕಾದಷ್ಟು ಸಾಕ್ಷ್ಯಧಾರಗಳಿದ್ದು, ವಿಚಾರಣೆಯ ಬಳಿಕ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಬಾಲಾಜಿ ಅವರು ಹಣ ಪಾವತಿಸದೇ 1.50 ಟನ್ ಸಿಹಿ ತಿನಿಸುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ.ನಂತರ ಅದನ್ನು ವಿತರಿಸಿದ್ದಾರೆ ಎಂದು ಸಚಿವರು ಆರೋಪಿಸಿದರು.
ಡೈರಿ ಘಟಕದಲ್ಲಿ ಉದ್ಯೋಗ ನೇಮಕಾತಿಯಲ್ಲೂ ಅವ್ಯವಹಾರ ನಡೆದಿದೆ ಎಂದು ಸಚಿವರು ಆರೋಪಿಸಿದ್ದಾರೆ. ದಲ್ಲಾಳಿ ಹಾಗೂ ಮಧ್ಯವರ್ತಿಗಳ ಮುಖಾಂತರ ಕೆಲಸ ನೀಡಲಾಗಿದೆ. ಈ ಬಗ್ಗೆಯೂ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎಂದವರು ಹೇಳಿದ್ದಾರೆ.
ಇದಕ್ಕೂ ಮೊದಲು ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉತ್ಪದನಾ ಘಟಕವನ್ನು ಸಚಿವರು ಪರಿಶೀಲಿಸಿದರು.
ಎಐಎಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗ ಸ್ವೀಟ್ ಹಗರಣ ನಡೆದಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲೂ ಟೀಕೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.