ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠ ಈ ಆದೇಶ ನೀಡಿದೆ.
ಆಮ್ ಆದ್ಮಿ ಪಕ್ಷದ ನಾಯಕ (ಎಎಪಿ) ಮನೀಶ್ ಸಿಸೋಡಿಯಾ ಅವರು ಕಳೆದ ವರ್ಷ ಜಾಮೀನು ಅರ್ಜಿ ವಜಾಗೊಳಿಸಿದ್ದ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
2023ರ ಅಕ್ಟೋಬರ್ 30ರಂದು ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಡಿಸೆಂಬರ್ 14ರಂದು ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿತ್ತು. ಇದರಿಂದ ಲೋಕಸಭೆ ಚುನಾವಣೆಗೂ ಮುನ್ನ ಮನೀಶ್ ಸಿಸೋಡಿಯಾಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.
2023ರ ಫೆಬ್ರುವರಿ 26ರಂದು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಬಂಧಿಸಿತ್ತು. ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಮಾರ್ಚ್ 9ರಂದು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು. ಫೆ.28ರಂದು ದೆಹಲಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.
2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ದೆಹಲಿ ಸರ್ಕಾರ ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪಗಳ ನಡುವೆ 2022ರ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.