ADVERTISEMENT

ವಿಚಾರಣಾಧೀನ ಕೈದಿಗಳ ತ್ವರಿತ ಬಿಡುಗಡೆಗೆ ಕ್ರಮ: ಮೋದಿ ಪ್ರತಿಪಾದನೆ

ಅಖಿಲ ಭಾರತ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರಗಳ ಪ್ರಥಮ ಸಮಾವೇಶ

ಪಿಟಿಐ
Published 30 ಜುಲೈ 2022, 11:27 IST
Last Updated 30 ಜುಲೈ 2022, 11:27 IST
ಅಖಿಲ ಭಾರತ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರಗಳ ಪ್ರಥಮ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಲೋಚನೆಯಲ್ಲಿ ತೊಡಗಿದ್ದರು –ಪಿಟಿಐ ಚಿತ್ರ
ಅಖಿಲ ಭಾರತ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರಗಳ ಪ್ರಥಮ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಲೋಚನೆಯಲ್ಲಿ ತೊಡಗಿದ್ದರು –ಪಿಟಿಐ ಚಿತ್ರ   

ನವದೆಹಲಿ: ‘ವಿಚಾರಣಾಧೀನ ಕೈದಿಗಳ ಬಗ್ಗೆ ಸಂವೇದನಾಶೀಲತೆಯ ಅಗತ್ಯತೆಯನ್ನು ಸುಪ್ರೀಂಕೋರ್ಟ್‌ ಹಲವಾರು ಸಂದರ್ಭಗಳಲ್ಲಿ ಪ್ರತಿಪಾದಿಸಿದೆ. ಹೀಗಾಗಿ, ಸ್ವಾತಂತ್ರ್ಯದ ಅಮೃತಮಹೋತ್ಸವದ ಈ ಸಂದರ್ಭದಲ್ಲಿ ವಿಚಾರಣಾಧೀನ ಕೈದಿಗಳ ಬಿಡುಗಡೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ನ್ಯಾಯಾಂಗ ಕ್ರಮ ಕೈಗೊಳ್ಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶನಿವಾರ ಇಲ್ಲಿ ಆರಂಭವಾದ ಎರಡು ದಿನಗಳ ಅಖಿಲ ಭಾರತ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರಗಳ ಪ್ರಥಮ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ವಿಚಾರಣಾಧೀನ ಕೈದಿಗಳಿಗೆ ಕಾನೂನು ನೆರವು ಒದಗಿಸುವ ಜವಾಬ್ದಾರಿಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು (ಡಿಎಲ್‌ಎಸ್‌ಎ) ವಹಿಸಿಕೊಳ್ಳಬೇಕು. ಇಂಥ ಕ್ರಮಗಳಿಂದ ವಿಚಾರಣಾಧೀನ ಕೈದಿಗಳ ಬಿಡುಗಡೆ ಪ್ರಕ್ರಿಯೆಗೆ ಮತ್ತಷ್ಟೂ ವೇಗ ಸಿಗಲಿದೆ’ ಎಂದು ಮೋದಿ ಹೇಳಿದರು.

ADVERTISEMENT

‘ಸುಲಲಿತ ವ್ಯಾಪಾರ, ಸುಲಲಿತ ಜೀವನದಂತೆಯೇ ನ್ಯಾಯ ನೀಡುವ ಪ್ರಕ್ರಿಯೆಯೂ ಸರಳವಾಗಿರಬೇಕು. ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಯ ಈ ಸಂದರ್ಭದಲ್ಲಿ ಕೈಗೊಳ್ಳುವ ಇಂತಹ ಸಂಕಲ್ಪವು ಮುಂದಿನ 25 ವರ್ಷಗಳ ಅವಧಿಯಲ್ಲಿ ದೇಶವನ್ನು ಮತ್ತಷ್ಟೂ ಎತ್ತರಕ್ಕೆ ಕೊಂಡೊಯ್ಯುವುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಚಾರಣಾಧೀನ ಕೈದಿಗಳ ಬಿಡುಗಡೆಗೆ ಸಂಬಂಧಿಸಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು (ಎನ್‌ಎಎಲ್‌ಎಸ್‌ಎ) ಕೈಗೊಂಡಿರುವ ಅಭಿಯಾನವನ್ನು ಶ್ಲಾಘಿಸಿದ ಪ್ರಧಾನಿ, ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯದಲ್ಲಿ ತೊಡಗುವಂತೆ ವಕೀಲರ ಸಂಘ ಅವರನ್ನು ಉತ್ತೇಜಿಸಬೇಕು ಎಂದರು.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಡಿ.ವೈ.ಚಂದ್ರಚೂಡ್, ಕಾನೂನು ಸಚಿವ ಕಿರಣ್‌ ರಿಜಿಜು, ಕೇಂದ್ರ ಕಾನೂನು ಖಾತೆ ರಾಜ್ಯ ಸಚಿವ ಎಸ್‌.ಪಿ.ಎಸ್‌ ಬಘೇಲ್‌ ಇದ್ದರು.

ಹೈಕೋರ್ಟ್‌ಗಳ ಮುಖ್ಯನ್ಯಾಯಮೂರ್ತಿಗಳು, ರಾಜ್ಯ ಕಾನೂನುಸೇವೆಗಳ ಪ್ರಾಧಿಕಾರಗಳ (ಎಸ್‌ಎಲ್‌ಎಸ್‌ಎ) ಕಾರ್ಯಕಾರಿ ಚೇರಮನ್‌ಗಳು ಹಾಗೂ ಡಿಎಲ್‌ಎಸ್‌ಎಗಳ ಚೇರಮನ್‌ ಪಾಲ್ಗೊಂಡಿದ್ದರು.

***

ನ್ಯಾಯದಾನಕ್ಕೆ ಸಂಬಂಧಿಸಿದ ಪ್ರಾಚೀನ ಮೌಲ್ಯಗಳಿಗೆ ಬದ್ಧವಾಗಿರುವುದರ ಜೊತೆಗೆ 21ನೇ ಶತಮಾನದ ಆಶಯಗಳಿಗೂ ಸ್ಪಂದಿಸುವುದನ್ನು ನಮ್ಮ ನ್ಯಾಯಾಂಗ ವ್ಯವಸ್ಥೆ ಸಾಬೀತುಪಡಿಸಿದೆ

- ನರೇಂದ್ರ ಮೋದಿ, ಪ್ರಧಾನಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.