ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾದ ಪರಿಣಾಮ ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆಯಲ್ಲಿ ಭಾಗಿಯಾಗಲು ಸಾಧ್ಯವಾಗದ ಕೆಲವು ಆಕಾಂಕ್ಷಿಗಳು ಇದೀಗ ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ಬಯಸುತ್ತಿರುವುದನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ಹೇಳಿದೆ.
ಕೊರೊನಾದ ಮೊದಲ ಹಾಗೂ 2ನೇ ಅಲೆಯ ವೇಳೆ ಕೋವಿಡ್ ಸೋಂಕಿಗೆ ತುತ್ತಾಗಿ ಹಲವು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎಲ್ಲಾ ಅಭ್ಯರ್ಥಿಗಳ ವಯೋಮಿತಿಯನ್ನು ಸಡಿಲಿಸುವ ಮೂಲಕ ಮತ್ತೊಂದು ಅವಕಾಶ ನೀಡಬೇಕೆಂಬ ಅಭ್ಯರ್ಥಿಗಳ ಕೋರಿಕೆಯನ್ನು ಸರ್ಕಾರ ಅನುಕಂಪದ ಆಧಾರದಲ್ಲಿ ಪರಿಗಣಿಸಬೇಕು ಎಂದು ಸಂಸದೀಯ ಸಮಿತಿಯೊಂದು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಕಳೆದ ವಾರವಷ್ಟೇ ಕೊರೊನಾ ಸೋಂಕಿನ ಕಾರಣಕ್ಕೆ ಯುಪಿಎಸ್ಸಿ ಪರೀಕ್ಷೆ ಬರೆಯಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಸ್ಪಷ್ಟವಾಗಿ ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.