ದೇವೇಂದ್ರ ಫಡಣವೀಸ್
(ಪಿಟಿಐ ಚಿತ್ರ)
ಮುಂಬೈ: ಬೆಂಗಳೂರಿನ ಶಿವಾಜಿನಗರದ ಮೆಟ್ರೊ ನಿಲ್ದಾಣದ ಹೆಸರನ್ನು ಸೇಂಟ್ ಮೇರಿ ಎಂದು ಮರುನಾಮಕರಣ ಮಾಡುವುದನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಗುರುವಾರ ವಿರೋಧಿಸಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಾಜಿನಗರದಲ್ಲಿರುವ ಸೇಂಟ್ ಮೇರಿಸ್ ಬೆಸಿಲಿಕಾದ ವಾರ್ಷಿಕ ಹಬ್ಬದಲ್ಲಿ ಇತ್ತೀಚೆಗೆ ಭಾಗವಹಿಸಿದ್ದ ಸಿದ್ದರಾಮಯ್ಯ ಅವರಿಗೆ, ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರಿಡಬೇಕು ಎಂದು ಮನವಿ ಮಾಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಮರುನಾಮಕರಣದ ಬಗ್ಗೆ ಸರ್ಕಾರ ಪರಿಗಣಿಸುತ್ತದೆ ಎಂದು ತಿಳಿಸಿದ್ದರು.
ಸಮುದಾಯವು ಮನವಿ ಮಾಡಿದಾಗ ಅದಕ್ಕೆ ಪ್ರತಿಕ್ರಿಯಿಸಿವುದರಲ್ಲಿ ತಪ್ಪೇನು ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಾ ಹೇಳಿದ್ದರು.
ಈ ಬಗ್ಗೆ ಇಲ್ಲಿ ಪ್ರತಿಕ್ರಿಯಿಸಿರುವ ಫಡಣವೀಸ್, ಶಿವಾಜಿನಗರ ಮೆಟ್ರೋ ನಿಲ್ದಾಣದ ಹೆಸರನ್ನು ಮರುನಾಮಕರಣ ಮಾಡುವುದನ್ನು ನಾನು ಖಂಡಿಸುತ್ತೇನೆ. ಇದು ಛತ್ರಪತಿ ಶಿವಾಜಿಗೆ ಮಾಡುವ ಅವಮಾನವಾಗಿದೆ. ಕಾಂಗ್ರೆಸ್ ನೆಹರೂ ಕಾಲದಿಂದಲೂ ಶಿವಾಜಿಗೆ ಅವಮಾನ ಮಾಡುವ ಸಂಪ್ರದಾಯವನ್ನು ಉಳಿಸಿಕೊಂಡು ಬಂದಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.