ADVERTISEMENT

ರೈತರು ಇನ್ನೆಷ್ಟು ಬಲಿದಾನ ಮಾಡಬೇಕು? ರಾಹುಲ್ ಗಾಂಧಿ ಪ್ರಶ್ನೆ

ಪಿಟಿಐ
Published 12 ಡಿಸೆಂಬರ್ 2020, 10:09 IST
Last Updated 12 ಡಿಸೆಂಬರ್ 2020, 10:09 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ    

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಕಳೆದ 17 ದಿನಗಳಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಧ್ಯಮ ವರದಿಯೊಂದನ್ನು ಉಲ್ಲೇಖ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರೈತರು ಇನ್ನೆಷ್ಟು ಬಲಿದಾನ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ಸರಕಾರ ಹಾಗೂ ರೈತರ ಪ್ರತಿನಿಧಿಗಳ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಬಿಕ್ಕಟ್ಟು ಬಗೆ ಹರಿದಿಲ್ಲ. ಇನ್ನೊಂದೆಡೆ ರೈತರು, ರಾಷ್ಟ್ರ ರಾಜಧಾನಿ ನವದೆಹಲಿ, ಹರಿಯಾಣ ಗಡಿ ಭಾಗಗಳಲ್ಲಿ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

'ಕೇಂದ್ರ ಸರಕಾರವು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ರೈತರು ಇನ್ನು ಎಷ್ಟು ಬಲಿದಾನ ಮಾಡಬೇಕಾಗುತ್ತದೆ?' ಎಂದು ರಾಹುಲ್ ಗಾಂಧಿ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡರು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ನಿರತ 11 ರೈತರು ವಿವಿಧ ಕಾರಣಗಳಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಮಾಧ್ಯಮ ವರದಿಯನ್ನು ರಾಹುಲ್ ಗಾಂಧಿ ಹಂಚಿದ್ದಾರೆ.

ಏತನ್ಮಧ್ಯೆ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿರುವ ರಾಹುಲ್ ಗಾಂಧಿ, ಕೇಂದ್ರ ಸರಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಲೇ ಇದ್ದಾರೆ. ಡಿಸೆಂಬರ್ 10 ವಿಶ್ವ ಮಾನವ ಹಕ್ಕುಗಳ ದಿನಚಾರಣೆಯಂದು, ಕೇಂದ್ರ ಸರಕಾರವು ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.