ಲಖಿಂಪುರ ಖೇರಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ಲಖಿಂಪುರ ಖೇರಿಯಲ್ಲಿ ಮೂರು ದಿನಗಳ ಪ್ರತಿಭಟನೆ ಆರಂಭಿಸಿದ್ದಾರೆ.
ಮಧ್ಯಪ್ರದೇಶ, ಉತ್ತರಾಖಂಡ ಮತ್ತು ತಮಿಳುನಾಡಿನ ರೈತರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಮತ್ತು 2022ರ ವಿದ್ಯುತ್ (ತಿದ್ದುಪಡಿ) ಕಾಯ್ದೆ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ)ದ ಇತರ ಸಂಘಟನೆಗಳು ಆಗಸ್ಟ್ 18ರಿಂದ 20ರ ವರೆಗೆ 75 ಗಂಟೆಗಳ ಪ್ರತಿಭಟನೆಗೆ ಕರೆ ನೀಡಿವೆ.
ರಾಷ್ಟ್ರದಾದ್ಯಂತ ರೈತರ ಪರ ನ್ಯಾಯಕ್ಕಾಗಿ ಹೋರಾಟವನ್ನು ಮುಂದುವರಿಸುವುದಾಗಿ ಬಿಕೆಯು ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಂಪುಟದಿಂದ ಕೈಬಿಡಬೇಕು ಎಂಬ ಲಖಿಂಪುರ ಪ್ರತಿಭಟನೆಯ ಪ್ರಮುಖ ಆಗ್ರಹವಾಗಿದೆ. ಜೊತೆಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಎಸ್ಕೆಎಂ ಒಳಗೊಂಡಿದೆ ಎಂದು ರಾಕೇಶ್ ಟಿಕಾಯತ್ ತಿಳಿಸಿದರು.
ಆಶಿಶ್ ಮಿಶ್ರಾ, ಅಜಯ್ ಮಿಶ್ರಾ ಅವರ ಪುತ್ರ. ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹತ್ತಿಸಿ ನಾಲ್ವರನ್ನು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ. ರೈತರ ವಿರುದ್ಧ ಪ್ರಚೋದನಕಾರಿ ಭಾಷೆ ಬಳಸದಿದ್ದರೆ ಲಖಿಂಪುರ ಖೇರಿ ಹಿಂಸಾಚಾರ ನಡೆಯುತ್ತಿರಲಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಜಯ್ ಮಿಶ್ರಾ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.