ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಇಂದು ದೇಶದಾದ್ಯಂತ ನಡೆದ ಚಕ್ಕಾ ಜಾಮ್ ಅಂತ್ಯವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಹೊರ ವಲಯದಲ್ಲಿ ನಿಯೋಜಿಸಲಾಗಿರುವ ಭದ್ರತೆ ಇನ್ನೂ ಮುಂದುವರಿದಿದೆ.
ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ಮತ್ತೊಮ್ಮೆ ಕಡಿತಗೊಳಿಸಲಾಗಿದೆ.
ರೈತರು ದೇಶದಾದ್ಯಂತ 'ಚಕ್ಕಾ ಜಾಮ್' ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು (ಫೆಬ್ರುವರಿ 06) ರಾತ್ರಿ 11:59 ಗಂಟೆ ವರೆಗೂ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಹೋರಾಟದ ಹಿಂದೆ ಅಂತರರಾಷ್ಟ್ರೀಯ ಪಿತೂರಿ ಇದೆ ಎಂಬ ಆರೋಪವನ್ನು ರೈತ ನಾಯಕ ರಾಕೇಶ್ ಟಿಕಾಯತ್ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಟಿಕಾಯತ್, 'ಯಾವ ಅಂತರರಾಷ್ಟ್ರೀಯ ಪಿತೂರಿ? ಯಾವ ಮಾನಹಾನಿ? ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಇದು ಭಾರತಕ್ಕೆ ಕೆಟ್ಟ ಹೆಸರು ತಂದಂತೆ ಆಗುತ್ತದೆಯೇ? ಬೆಂಬಲ ಬೆಲೆ ಕಾಯ್ದೆ ಇದ್ದರೆ ಮಾತ್ರ ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತದೆ. ಬೆಂಬಲ ಬೆಲೆ ಪ್ರಕ್ರಿಯೆ ಇಲ್ಲದಿರುವುದೇ ಒಂದು ದೊಡ್ಡ ಪಿತೂರಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ: ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ರೈತ, ದಲಿತ, ಕಾರ್ಮಿಕ ಸಂಘಟನೆ ಸದಸ್ಯರು ಶನಿವಾರ ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಹೊಸಪೇಟೆ-ಕಂಪ್ಲಿ ಹೆದ್ದಾರಿಯಲ್ಲಿ ರೈತರು ರಸ್ತೆತಡೆ ಚಳವಳಿ ನಡೆಸುತ್ತಿದ್ದಾರೆ.
ಮೈಸೂರಿನ ಬೆಂಗಳೂರು ನೀಲಗಿರಿ ರಸ್ತೆ ತಡೆದು ಐಕ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೆ ಅಡುಗೆ ಮಾಡಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿದರು.
ಬೆಂಗಳೂರು: ‘ರೈತರು ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೃಷಿ ಕಾನೂನುಗಳನ್ನು ವಿರೋಧಿಸಿ ಮಂಡ್ಯದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿರುವ ರೈತರು ಆಂಬುಲೆನ್ಸ್ಗೆ ದಾರಿ ಬಿಟ್ಟುಕೊಟ್ಟರು.
ಬೆಳಗಾವಿ ಜಿಲ್ಲೆಯ ನಿಚ್ಚಣಕಿ ರೈತರಿಂದ ರಸ್ತಾರೋಕೋ, ಕಿತ್ತೂರು, ತಡಕೋಡ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರಯಾಣಿಕರು ಮತ್ತು ರೈತ ಸಂಘಟನೆ ಕಾರ್ಯಕರ್ತರ ಮಧ್ಯ ಮಾತಿನ ಚಕಮಕಿ ನಡೆಯಿತು.
ಕೃಷಿ, ಎಪಿಎಂಸಿ, ವಿದ್ಯುತ್ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕುರುಕೋಡು ತಾಲ್ಲೂಕು ಕೋಳೂರು ಕ್ರಾಸ್ ಬಳಿ ರೈತ ಸಂಘಟನೆಗಳ ಮುಖಂಡರು ಶ್ರೀರಂಗಪಟ್ಟಣ ಬೀದರ್ ರಾಜ್ಯ ಹೆದ್ದಾರಿ ತಡೆನಡೆಸಿದರು.
ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಕೇಂದ್ರ ಸರ್ಕಾರದ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.
ಬಾಗಲಕೋಟೆ: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಹಿನ್ನೆಲೆಯಲ್ಲಿ ಹುನಗುಂದ ಪಟ್ಟಣದಲ್ಲಿ ಶನಿವಾರ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ಆರಂಭಿಸಲಾಗಿದೆ.
ಹುನಗುಂದ ಪಟ್ಟಣದ ಹೊರ ವಲಯದಲ್ಲಿರುವ ಚಿತ್ರದುರ್ಗ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಜಮಾಯಿಸಿರುವ ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
ಬೆಳಗಾವಿ: ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಚಳವಳಿ ಬೆಂಬಲಿಸಿ ಭಾರತೀಯ ಕೃಷಿಕ ಸಮಾಜ, ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳವರು ಇಂದು ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
ರೈತರ ಚಕ್ಕಾ ಜಾಮ್ ಪ್ರತಿಭಟನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ 50 ಸಾವಿರ ಭದ್ರತಾ ಸಿಬ್ಬಂದಿಯನ್ನು ದೆಹಲಿಯಲ್ಲಿ ನಿಯೋಜಿಸಲಾಗಿದೆ.
ಪರಿಸ್ಥಿತಿಯ ಮೇಲ್ವಿಚಾರಣೆಗಾಗಿ ಡ್ರೋನ್ ಕ್ಯಾಮೆರಾಗಳನ್ನೂ ನಿಯೋಜಿಸಲಾಗಿದೆ.
ಫೆಬ್ರವರಿ 6 ಶನಿವಾರದಂದು (ಇಂದು) ನಡೆಯಲಿರುವ ದೇಶವ್ಯಾಪ್ತಿ ಚಕ್ಕಾ ಜಾಮ್ (ರಸ್ತೆ ದಿಗ್ಬಂಧನ) ಪ್ರತಿಭಟನೆಯಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳನ್ನು ಹೊರತುಪಡಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.