ನವದೆಹಲಿ: ನೂತನ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಹಾರಾಷ್ಟ್ರದ ಸಾವಿರಾರು ರೈತರು ಸೋಮವಾರ ನಾಸಿಕ್ನಿಂದ ದೆಹಲಿಯತ್ತ ತೆರಳಿದರು.
ಕಿಸಾನ್ ಸಭೆಯ ಮುಖಂಡರೊಂದಿಗೆ ಖಾಸಗಿ ವಾಹನಗಳಲ್ಲಿ ತೆರಳಿದರು. ಈ ಬಗ್ಗೆ ಮಾಹಿತಿ ನೀಡಿರುವ ರೈತ ಮುಖಂಡರೊಬ್ಬರು ಮಹಾರಾಷ್ಟ್ರದ 21 ಜಿಲ್ಲೆಗಳ ರೈತರು ದೆಹಲಿಗೆ ತೆರಳುತ್ತಿದ್ದಾರೆ ಎಂದಿದ್ದಾರೆ.
ಮಹಾರಾಷ್ಟ್ರದ ಕೃಷಿಕರು ವಿದ್ಯುತ್ ಮಸೂದೆಗಳನ್ನು ಮನ್ನಾ ಮಾಡಿ ಎಂ.ಎಸ್. ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನಿಧಿಯನ್ನು ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ.
ರೈತರನ್ನು ಉದ್ದೇಶಿಸಿ ಮಾತನಾಡಿದ ಅಖಿಲ್ ಭಾರತೀಯ ಕಿಸಾನ್ ಸಭಾ ಮುಖಂಡರಾದ ಅಶೋಕ್ ಧವಾಲೆ ಮತ್ತು ಅಜಿತ್ ನವಾಲೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಆರ್ಎಸ್ಎಸ್ ಅನ್ನು ತರಾಟೆಗೆ ತೆಗೆದುಕೊಂಡರು. ಆಯ್ದ ಕಾರ್ಪೋರೇಟ್ಗಳಿಗೆ ಲಾಭ ನೀಡುವ ಏಕೈಕ ಉದ್ದೇಶದಿಂದ ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಆರೋಪಿಸಿದರು.
ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿ ಮೂಲಕ ರೈತರು, 1,200 ಕೀ.ಮೀ. ಕ್ರಮಿಸಿ ಡಿಸೆಂಬರ್ 24ರಂದು ರಾಷ್ಟ್ರ ರಾಜಧಾನಿಯನ್ನು ತಲುಪುವ ನಿರೀಕ್ಷೆಯಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.