ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಆರು ತಿಂಗಳು ಸಂದಿದ್ದು, ಇದರ ಅಂಗವಾಗಿ ಬುಧವಾರ (ಮೇ 26) ‘ಕರಾಳ ದಿನ’ ಆಚರಿಸಲಾಗುತ್ತಿದೆ.
ಆರು ತಿಂಗಳು ಕಳೆದರೂ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗದ ಕಾರಣ ಸರ್ಕಾರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ದೆಹಲಿಯ ಟಿಕ್ರಿ, ಸಿಂಘು, ಗಾಜಿಪುರ ಗಡಿಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ರೈತರು ಸೇರಿದ್ದಾರೆ. ರೈತರ ಈ ಪ್ರತಿಭಟನೆಗೆ 10ಕ್ಕೂ ಹೆಚ್ಚು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ಉದ್ಯಮಿಗಳಿಗೆ ನೆರವು ನೀಡುವಂತಿವೆ ಎಂದು ಆರೋಪಿಸಿರುವ ರೈತರು ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿ ಪಡಿಸುವುದು ರೈತರ ಬೇಡಿಕೆಗಳಲ್ಲಿ ಪ್ರಮುಖವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.