ADVERTISEMENT

ರೈತರ ರ‍್ಯಾಲಿ: ಪೊಲೀಸರಿಗೆ ಅಧಿಕಾರ - ಸುಪ್ರೀಂ ಕೋರ್ಟ್ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 19:32 IST
Last Updated 18 ಜನವರಿ 2021, 19:32 IST
ದೆಹಲಿಯ ಸಿಂಘು ಗಡಿಯಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು –ಪಿಟಿಐ ಚಿತ್ರ
ದೆಹಲಿಯ ಸಿಂಘು ಗಡಿಯಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು –ಪಿಟಿಐ ಚಿತ್ರ   

ನವದೆಹಲಿ: ‘ಪ್ರತಿಭಟನಾನಿರತ ರೈತರು ಗಣರಾಜ್ಯೋತ್ಸವದಂದು (ಜ.26) ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಉದ್ದೇಶಿಸಿರುವುದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿದ್ದು, ಅನುಮತಿ ನೀಡಬೇಕೇ ಬೇಡವೇ ಎಂಬುದು ದೆಹಲಿ ಪೊಲೀಸರಿಗೆ ಬಿಟ್ಟ ವಿಚಾರ’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

ಉದ್ದೇಶಿತ ಟ್ರ್ಯಾಕ್ಟರ್ ರ‍್ಯಾಲಿಯು ಗಣರಾಜ್ಯೋತ್ಸವ ಸಮಾರಂಭಕ್ಕೆ ಅಡ್ಡಿಯಾಗುವ ಸಾಧ್ಯತೆ ಇದ್ದು, ಅದಕ್ಕೆ ಅಥವಾ ಯಾವುದೇ ರೀತಿಯ ಪ್ರತಿಭಟನೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ನ್ಯಾಯಪೀಠ, ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಪೊಲೀಸರಿಗೆ ಅಧಿಕಾರವಿದೆ ಎಂದಿದೆ.

‘ಪೊಲೀಸರ ಅಧಿಕಾರಗಳು ಯಾವುವು ಮತ್ತು ಅವುಗಳನ್ನು ಹೇಗೆ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಬೇಕೇ? ಏನು ಮಾಡಬೇಕೆಂದು ನಾವು ನಿಮಗೆ ಹೇಳಲು ಹೋಗುವುದಿಲ್ಲ’ ಎಂದು ನ್ಯಾಯಮೂರ್ತಿಗಳಾದ ಎಲ್.ಎನ್. ರಾವ್ ಮತ್ತು ವಿನೀತ್ ಸರನ್ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿತು.

ADVERTISEMENT

‘ರೈತರು ದೆಹಲಿಗೆ ಪ್ರವೇಶಿಸುವ ಪ್ರಶ್ನೆಯು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದೆ. ಅದನ್ನು ಪೊಲೀಸರು ನಿರ್ಧರಿಸುತ್ತಾರೆ’ ಎಂದ ಪೀಠ, ಈ ವಿಷಯವನ್ನು ಎದುರಿಸಲು ನಿಮಗೆ ಎಲ್ಲ ಅಧಿಕಾರವಿದೆ ಎಂದು ಅಟಾರ್ನಿ ಜನರಲ್ ಅವರಿಗೆ ತಿಳಿಸಿತು. ವಿಚಾರಣೆಯನ್ನು ಜ. 20ಕ್ಕೆ ಮುಂದೂಡಲಾಯಿತು.

ಗಣರಾಜ್ಯೋತ್ಸವ ಆಚರಣೆಗೆ ಅಡ್ಡಿಪಡಿಸುವ ಮತ್ತು ತೊಂದರೆ ನೀಡಲು ಪ್ರಯತ್ನಿಸುವ ಯಾವುದೇ ಉದ್ದೇಶಿತ ಮೆರವಣಿಗೆ ಅಥವಾ ಪ್ರತಿಭಟನೆಯು ‘ರಾಷ್ಟ್ರಕ್ಕೆ ಮುಜುಗರ’ ಉಂಟು ಮಾಡುತ್ತದೆ ಎಂದು ದೆಹಲಿ ಪೊಲೀಸರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಕೇಂದ್ರ ಸರ್ಕಾರ ಹೇಳಿತ್ತು.

ಸುಪ್ರೀಂ ಕೋರ್ಟ್ ನೇಮಿಸಿರುವ ನಾಲ್ವರು ಸದಸ್ಯರ ಸಂಧಾನ ಸಮಿತಿಯಲ್ಲಿ ಮೂವರನ್ನು ಬದಲಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಪೀಠ, ಈ ಬಗ್ಗೆಯೂ ಮುಂದಿನ ವಿಚಾರಣೆಯಲ್ಲಿ ಪರಿಶೀಲಿಸುವುದಾಗಿ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.