ADVERTISEMENT

ಮುಂಬೈನಲ್ಲಿ ರೈತರ ಬೃಹತ್ ಪ್ರತಿಭಟನೆ: ಸಂಜಯ್ ರಾವುತ್ ಎಚ್ಚರಿಕೆ

ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಎಚ್ಚರಿಕೆ

ಪಿಟಿಐ
Published 25 ಜನವರಿ 2021, 8:18 IST
Last Updated 25 ಜನವರಿ 2021, 8:18 IST
ಸಂಜಯ್ ರಾವುತ್
ಸಂಜಯ್ ರಾವುತ್   

ಮುಂಬೈ: ‘ಮುಂಬೈನಲ್ಲಿ ಕೊರೊನಾ ಸೋಂಕಿನ ಭೀತಿ ಇನ್ನೂ ಮುಂದುವರಿದಿದ್ದು, ಮಂಗಳವಾರ ಇಲ್ಲಿ ನಡೆಯಲಿರುವ ರೈತರ ಬೃಹತ್ ಪ್ರತಿಭಟನೆ ವೇಳೆ ಸೋಂಕು ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದರೆ, ಹೊಸ ಬಿಕ್ಕಟ್ಟು ಸೃಷ್ಟಿಯಾಗುತ್ತದೆ‘ ಎಂದು ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಎಚ್ಚರಿಸಿದ್ದಾರೆ.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ಸಿಂಘು ಗಡಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ನೀಡುವುದಕ್ಕಾಗಿ ಮಹಾರಾಷ್ಟ್ರದ ರೈತರು ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ‘ ಎಂದರು.

‘ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮಹಾರಾಷ್ಟ್ರದ ಬೇರೆ ಬೇರೆ ಭಾಗಗಳಿಂದ ಸಾವಿರಾರು ರೈತರು ಈಗಾಗಲೇ ಮುಂಬೈ ತಲುಪಿಸಿದ್ದಾರೆ. ಮುಂಬೈನಲ್ಲಿ ಇನ್ನೂ ಕೊರೊನಾ ಸೋಂಕಿನ ಭೀತಿ ಇರುವುದರಿಂದ, ಸೋಂಕು ಹರಣದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೊಸ ಆರೋಗ್ಯ ಬಿಕ್ಕಟ್ಟು ಎದುರಾಗುತ್ತದೆ‘ ಎಂದು ರಾವುತ್ ಹೇಳಿದ್ದಾರೆ.

ADVERTISEMENT

‘ದೇಶದಲ್ಲಿ ಅಸ್ಥಿರತೆಯ ವಾತಾವರಣ ಮುಂದುವರಿದಿದೆ. ರಾಜಕೀಯ ಲಾಭಕ್ಕಾಗಿ ಹಲವು ಕಾಣದ ಶಕ್ತಿಗಳು ರೈತರಿಗೆ ನ್ಯಾಯ ದೊರಕಿಸಿಕೊಡಲು ಅವಕಾಶ ನೀಡುತ್ತಿಲ್ಲ. ಇದು ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ‘ ಎಂದು ಶಿವಸೇನೆಯ ಮುಖ್ಯ ವಕ್ತಾರರೂ ಆಗಿರುವ ರಾವುತ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.