ನವದೆಹಲಿ: ಹೊಸ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕೆಂಬ ತಮ್ಮ ಬೇಡಿಕೆಯನ್ನು ಸಡಿಲಿಸಲು ನಿರಾಕರಿಸಿರುವ ರೈತರು ಶುಕ್ರವಾರ ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆ ರಾಜಧಾನಿಯ ಗಡಿ ಪ್ರದೇಶಗಳಲ್ಲಿ ಶುಕ್ರವಾರವೂ ಪ್ರತಿಭಟನೆ ಮುಂದುವರಿಸಿದ್ದಾರೆ.
ಮೂವರು ಸಚಿವರು ಮತ್ತು ರೈತ ಪ್ರತಿನಿಧಿಗಳ ನಡುವೆ ಗುರುವಾರ ನಡೆದ ಮಾತುಕತೆ ವಿಫಲವಾದ ಕಾರಣ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ರೈತರ ಪ್ರತಿನಿಧಿಗಳ ಗುಂಪಿನ ಸದಸ್ಯರು ಇಂದು ಸಭೆ ಸೇರಿ ಚರ್ಚಿಸಲಿದ್ದಾರೆ.
ಉತ್ತರಪ್ರದೇಶದ ರೈತರು ಯುಪಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಪಂಜಾಬ್ ಮತ್ತು ಹರಿಯಾಣದ ರೈತರು ದೆಹಲಿಯ ಇತರ ಗಡಿ ಭಾಗದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ.
ರೈತರ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಮಾತುಕತೆ ಶನಿವಾರ ನಡೆಯಲಿದೆ. ಪ್ರತಿಭಟನೆ ಶುಕ್ರವಾರ 9ನೇ ದಿನಕ್ಕೆ ಕಾಲಿಟ್ಟಿದೆ.
ಈ ಮಧ್ಯೆ ರಾಜಧಾನಿ ಪ್ರವೇಶಿಸುವವರು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.