ಶ್ರೀನಗರ:ಸಂವಿಧಾನಧ 370ನೇ ವಿಧಿಯನ್ನು ಜಮ್ಮು ಕಾಶ್ಮೀರದಲ್ಲಿ ಮರುಸ್ಥಾಪಿಸುವ ಉದ್ದೇಶಕ್ಕಾಗಿ ಹೋರಾಡಲು ನ್ಯಾಷನಲ್ ಕಾನ್ಫರೆನ್ಸ್ನ (ಎನ್ಸಿ) ವರಿಷ್ಠ ಫಾರೂಕ್ ಅಬ್ದುಲ್ಲಾ ಅವರು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮೆಹಬೂಬಾ ಮುಫ್ತಿ, ಸಜ್ಜಾದ್ ಲೋನ್ ಮತ್ತು ಇತರ ಪ್ರಾದೇಶಿಕ ಪಕ್ಷಗಳೊಂದಿಗೆ ಗುರುವಾರ ಮೈತ್ರಿ ಘೋಷಿಸಿದ್ದಾರೆ.
ನಮ್ಮ ಮೈತ್ರಿಗೆ ‘ಗುಪ್ಕರ್ ಘೋಷಣೆಗೆ ನಾಗರಿಕರ ಮೈತ್ರಿ’ ಎಂಬ ಹೆಸರಿಟ್ಟಿದ್ದೇವೆ. ನಮ್ಮ ಯುದ್ಧವು ಸಾಂವಿಧಾನಿಕವಾದದ್ದು. 2019 ರ ಆಗಸ್ಟ್ 5ಕ್ಕೂ ಮೊದಲು ಜಮ್ಮು ಕಾಶ್ಮೀರದ ಜನ ಹೊಂದಿದ್ದ ಹಕ್ಕುಗಳನ್ನು ಕೇಂದ್ರ ಮರುಸ್ಥಾಪಿಸಬೇಕು ಎಂದು ನಾವು ಆಗ್ರಹಿಸುತ್ತೇವೆ’ ಎಂದು ಅಬ್ದುಲ್ಲಾ ಹೇಳಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಇದಕ್ಕೂ ಮೊದಲು ಎನ್ಸಿ ವರಿಷ್ಠ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಈ ಸಭೆಯಲ್ಲಿ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವ ಕಾರ್ಯತಂತ್ರಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.