ರಾಹುಲ್ ಗಾಂಧಿ
ಪಿಟಿಐ ಚಿತ್ರ
ಭುವನೇಶ್ವರ: ದೇಶ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಒಡಿಶಾದ ಜಾರ್ಸುಗುಡ ಜಿಲ್ಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ಯುವ ಘಟಕ, ಆರ್ಎಸ್ಎಸ್, ಬಜರಂಗ ದಳ ಸದಸ್ಯರು ಜಾರ್ಸುಗುಡ ಉತ್ತರ ವಲಯದ ಐಜಿಪಿ ಹಿಮಾಂಶು ಲಾಲ್ ಅವರಿಗೆ ಫೆಬ್ರುವರಿ 5ರಂದು ನೀಡಿದ ದೂರಿನನ್ವಯ ಶುಕ್ರವಾರ ಎಫ್ಐಆರ್ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ವಿರುದ್ಧ, ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕೃತ್ಯದಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿದೆ. ಅದರಂತೆ, ಜಾರ್ಸುಗುಡ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದೇವೆ ಎಂದಿದ್ದಾರೆ.
ರಾಹುಲ್ ಅವರು, ಪ್ರತಿಯೊಬ್ಬ ಭಾರತೀಯನಿಗೂ ನೋವುಂಟಾಗುವಂತಹ ದೇಶ ವಿರೋಧಿ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಐಜಿಪಿ ಅವರು ಈ ದೂರನ್ನು, ವಿಚಾರಣೆ ಹಾಗೂ ಅಗತ್ಯ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ಜಾರ್ಸುಗುಡ ಪೊಲೀಸ್ ವರಿಷ್ಠಾಧಿಕಾರಿಗೆ ವರ್ಗಾಯಿಸಿದ್ದರು. ಎಸ್ಪಿ ಅವರ ನಿರ್ದೇಶನದಂತೆ, ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
'ರಾಹುಲ್ ಗಾಂಧಿ ವಿರುದ್ಧದ ಆರೋಪದ ಸ್ವರೂಪದ ಬಗ್ಗೆ ನನಗೆ ಗೊತ್ತಿಲ್ಲ. ಏನಾಗಿದೆ ಎಂಬುದನ್ನು ಮೊದಲು ತಿಳಿಯಬೇಕಿದೆ. ಕಾಂಗ್ರೆಸ್, ಒಂದು ರಾಜಕೀಯ ಪಕ್ಷವಾಗಿ, ಬಿಜೆಪಿ ಮತ್ತು ಆರ್ಎಸ್ಎಸ್ನ ಸಿದ್ಧಾಂತದ ವಿರುದ್ಧ ಹೋರಾಟ ನಡೆಸುತ್ತಿದೆ' ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಶ್ರೀಕಾಂತ್ ಜೆನಾ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.