ನವದೆಹಲಿ: ತಮ್ಮ ಪಕ್ಷ ನೀಡಿದ್ದ ಸಲಹೆ ಮೇರೆಗೆ ಕೇಂದ್ರ ಸರ್ಕಾರ, ವಿದೇಶದಲ್ಲಿ ತಯಾರಿಸಿದ ಕೋವಿಡ್–19 ವಿರುದ್ಧದ ಲಸಿಕೆಗೆ ತುರ್ತು ಅನುಮೋದನೆ ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಆದರೆ, ಈ ವಿಷಯದಲ್ಲಿ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಯನ್ನು ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟೀಕಿಸಿದ್ದಾರೆ.
ಲಸಿಕೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಫಾರ್ಮಾ ಕಂಪನಿಗಳ ಪರ ರಾಹುಲ್ ಗಾಂಧಿ ಲಾಬಿ ನಡೆಸುತ್ತಿದ್ದಾರೆ ಎಂದು ದೂರಿದ್ದರು.
ಎಲ್ಲ ಲಸಿಕೆಗಳ ತುರ್ತು ಬಳಕೆಗೆ ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ಪ್ರಧಾನಿ ಅವರಿಗೆ ಪತ್ರ ಬರೆದಿದ್ದರು.
ಹೀಗಾಗಿ, ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿರುವ ರಾಹುಲ್ ಗಾಂಧಿ ಅವರು, ’ಮೊದಲು ನಿಮ್ಮನ್ನು ಕಡೆಗಣಿಸುತ್ತಾರೆ. ನಂತರ, ನಿಮ್ಮನ್ನು ನೋಡಿ ನಗುತ್ತಾರೆ. ಬಳಿಕ, ನಿಮ್ಮ ಜತೆ ಜಗಳ ತೆಗೆಯುತ್ತಾರೆ. ಕೊನೆಯಲ್ಲಿ, ನೀವೇ ಗೆಲ್ಲುತ್ತೀರಿ’ ಎನ್ನುವ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.
ಇತರ ದೇಶಗಳು ಅನುಮೋದನೆ ನೀಡಿರುವ ವಿದೇಶದಲ್ಲಿ ತಯಾರಿಸಿದ ಲಸಿಕೆಗಳಿಗೆ ತುರ್ತು ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿತ್ತು. ಕೋವಿಡ್–19 ಲಸಿಕೆಗಳ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.