ಅಗರ್ತಲಾ: ತ್ರಿಪುರಾದ ಅಗರ್ತಲಾ ರೈಲು ನಿಲ್ದಾಣದಲ್ಲಿ ಶಂಕಾಸ್ಪದವಾಗಿ ಓಡಾಡುತ್ತಿದ್ದ ಐವರು ಬಾಂಗ್ಲಾದೇಶಿ ಪ್ರಜೆಗಳು ಮತ್ತು ಅವರ ಮಾರ್ಗದರ್ಶಿಯೊಬ್ಬನನ್ನು ರೈಲ್ವೆ ಪೊಲೀಸರು (ಜಿಆರ್ಪಿ) ಭಾನುವಾರ ಮಧ್ಯಾಹ್ನ ಸುಮಾರು 1.30ಕ್ಕೆ ಬಂಧಿಸಿದ್ದಾರೆ.
ಅನುಮಾನಾಸ್ಪದವಾಗಿ ಓಡಾಡುತ್ತಿರುವ ಆರು ಮಂದಿ ರೈಲು ಹತ್ತಲು ಸಜ್ಜಾಗುತ್ತಿದ್ದಾರೆ ಎಂಬ ಮಾಹಿತಿ ದೊರಕುತ್ತಿದ್ದಂತೆ ಜಿಆರ್ಪಿ ತಂಡವು ತ್ವರಿತವಾಗಿ ಸ್ಥಳಕ್ಕೆ ಧಾವಿಸಿ ಅವರನ್ನು ಬಂಧಿಸಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಅವರಲ್ಲಿ ಐವರು ಬಾಂಗ್ಲಾದೇಶೀಯರು ಎಂದು ತಿಳಿದಿದೆ. ಆದರೆ, ಅವರ ಬಳಿ ಸಮರ್ಪಕವಾದ ದಾಖಲೆಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇವರ ಜೊತೆ ಇದ್ದ ಮತ್ತೊಬ್ಬ ವ್ಯಕ್ತಿ ಹೆಸರು ರೋಮಿಂಗ್ ರಾಶಿದ್ ಖಾನ್. ಈತ ಮಹಾರಾಷ್ಟ್ರದವನು. ತಾನು ಜವಳಿ ಉದ್ಯಮದಲ್ಲಿ ತೊಡಗಿರುವುದಾಗಿ ಮತ್ತು ಈ ಐವರನ್ನು ಕೂಲಿ ಕೆಲಸಕ್ಕೆ ನೇಮಿಸಿಕೊಳ್ಳಲು ತನ್ನ ಊರಿಗೆ ಕರೆದುಕೊಂಡು ಹೋಗುತ್ತಿದ್ದದ್ದಾಗಿ ಹೇಳಿದ್ದಾನೆ. ಈ ಕೃತ್ಯದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ತಿಳಿಯಲು ವಿಚಾರಣೆ ಮುಂದುವರೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.