ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಬ್ರಹ್ಮಪುತ್ರ ಸೇರಿದಂತೆ ಹಲವಾರು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪ್ರವಾಹಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದು, ಸತ್ತವರ ಸಂಖ್ಯೆ 7ಕ್ಕೇರಿದಂತಾಗಿದೆ.
ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 14,06,711 ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ‘ರಾಜ್ಯದ 33 ಜಿಲ್ಲೆಗಳ ಪೈಕಿ 25 ಜಿಲ್ಲೆಗಳ 2,168 ಗ್ರಾಮಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿಯುತ್ತಿರುವ ಕಾರಣ ಮುಂದಿನ 24 ಗಂಟೆಯಲ್ಲಿಯೂ ಪ್ರವಾಹ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ನಿರೀಕ್ಷಿಸುವಂತಿಲ್ಲ’ ಎಂದೂ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
‘234 ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದ್ದು, 20,047 ಜನ ಪ್ರವಾಹ ಸಂತ್ರಸ್ತರಿಗೆ ಆಶ್ರಯ ನೀಡಲಾಗಿದೆ. ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಸಿಬ್ಬಂದಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 24 ಗಂಟೆಯೂ ಕಾರ್ಯ ನಿರ್ವಹಿಸುವ ಸಹಾಯಕೇಂದ್ರವನ್ನು ಸ್ಥಾಪಿಸಲಾಗಿದೆ’ ಎಂದು ತಿಳಿಸಿದ್ದಾರೆ.
ರಸ್ತೆಗಳು, ಸೇತುವೆಗಳು ಹಾಗೂ ರೈಲು ಹಳಿಗಳಿಗೂ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಬಾರ್ಪೇಟಾ ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಹಾನಿಯಾಗಿದ್ದು, 5.22 ಲಕ್ಷ ಜನರು ತೊಂದರೆಗೆ ಸಿಲುಕಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಸರ್ಕಾರದಿಂದ ಮಾಹಿತಿ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.