ಅಹಮದಾಬಾದ್: ‘ಭಾರಿ ಮಳೆಯಿಂದಾಗಿ ಗುಜರಾತ್ನ ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸುಮಾರು 6 ಸಾವಿರ ಮಂದಿಯನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಅಹಮದಾಬಾದ್ ಸೇರಿದಂತೆ ದಕ್ಷಿಣ ಹಾಗೂ ಕೇಂದ್ರ ಭಾಗದ ಹಲವು ಜಿಲ್ಲೆಗಳಲ್ಲಿ ಹಿಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಹೀಗಾಗಿ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ’ ಎಂದು ತಿಳಿಸಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಕರೆಮಾಡಿ ಮಾತನಾಡಿದ್ದಾರೆ. ಕೇಂದ್ರದಿಂದ ಎಲ್ಲಾ ರೀತಿಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
‘ರಾಜ್ಯ ಹೆದ್ದಾರಿ ಸೇರಿದಂತೆ ಒಟ್ಟು 388 ರಸ್ತೆಗಳು ಜಲಾವೃತಗೊಂಡಿವೆ. ಎನ್ಡಿಆರ್ಎಫ್ನ 13 ಹಾಗೂ ಎಸ್ಡಿಆರ್ಎಫ್ನ 16 ತಂಡಗಳನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ’ ಎಂದೂ ಪ್ರಕಟಣೆಯಲ್ಲಿ ಹೇಳಲಾಗಿದೆ.
ದೇವಸ್ಥಾನ ಮುಳುಗಡೆ (ಮುಂಬೈ ವರದಿ): ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನದಿ ನೀರಿನ ಮಟ್ಟವೂ ಹೆಚ್ಚಳವಾಗಿದೆ. ಗೋದಾವರಿ ನದಿ ತೀರದಲ್ಲಿರುವ ದೇವಸ್ಥಾನಗಳು ಮುಳುಗಡೆಯಾಗಿವೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ನದಿ ನೀರಿನ ಮಟ್ಟ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ನದಿ ತೀರದಲ್ಲಿ ನೆಲೆಸಿರುವ ಜನರಿಗೆ ಪರಿಸ್ಥಿತಿಯ ಕುರಿತು ಮಾಹಿತಿ ನೀಡಲಾಗಿದೆ’ ಎಂದೂ ತಿಳಿಸಿದ್ದಾರೆ.
ಪುಣೆಯಲ್ಲಿ ಭೂಕುಸಿತ: ‘ನಿರಂತರ ಮಳೆಯಿಂದಾಗಿ ಭೀಮಾಶಂಕರ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದು, ಯಾರಿಗೂ ತೊಂದರೆ ಆಗಿಲ್ಲ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.