ಕನ್ಯಾಕುಮಾರಿ: ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ದುರಂತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಪ್ರಕಾರ ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದ ಜೂನ್ ತಿಂಗಳಿನಿಂದ ಇದುವರೆಗೆ 1,391 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 12,722 ಮಂದಿ ಗಾಯಗೊಂಡಿದ್ದಾರೆ. ಜೂನ್ ತಿಂಗಳ ಮಧ್ಯಭಾಗದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಂತರ ಹಲವೆಡೆ ಸರಣಿ ಪ್ರವಾಹಗಳು ಸಂಭವಿಸಿವೆ.
'ಪಾಕಿಸ್ತಾನದಲ್ಲಿ ಸಂಭವಿಸಿರುವ ಪ್ರವಾಹ ಭೀಕರವಾಗಿದೆ. ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ. ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗಿನ 'ಭಾರತ್ ಜೋಡೊ ಯಾತ್ರೆ'ಯಲ್ಲಿ ಪಾಲ್ಗೊಂಡಿದ್ದಾರೆ. ಕನ್ಯಾಕುಮಾರಿಯಿಂದ ನಾಗರಕೋಯಿಲ್ ಮೂಲಕ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ತೊಡಗಿದ್ದಾಗ ರಸ್ತೆಯುದ್ದಕ್ಕೂ ಸ್ವಾಗತಿಸಿದ ಭಾರಿ ಜನಸ್ತೋಮವು 'ತಲೈವರ್' ರಾಹುಲ್ ಗಾಂಧಿ ಎಂದು ಘೋಷಣೆಗಳನ್ನು ಮೊಳಗಿಸಿತು.
ಕಳೆದ ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ಪ್ರವಾಹ ಪರಿಸ್ಥಿತಿ ಕುರಿತಾಗಿ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.