
ರಾಹುಲ್ ಗಾಂಧಿ
(ಪಿಟಿಐ ಚಿತ್ರ)
ನವದೆಹಲಿ: ಕೇಂದ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡದಂತೆ ದೇಶಕ್ಕೆ ಭೇಟಿ ನೀಡುವ ಗಣ್ಯರಿಗೆ ಸೂಚನೆ ನೀಡುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಆರೋಪಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.
ದೇಶಕ್ಕೆ ಭೇಟಿ ನೀಡುವ ಗಣ್ಯರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದು ವಾಡಿಕೆಯಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವಾಲಯವು ಈ ಶಿಷ್ಟಾಚಾರವನ್ನು ಪಾಲಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಈ ಸಂಪ್ರದಾಯವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಅವರ ಅಧಿಕಾರದ ಅವಧಿಯಲ್ಲಿ ನಡೆಯುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿದೇಶಿ ಗಣ್ಯರು ದೇಶಕ್ಕೆ ಬಂದು ಹೋಗುವಾಗ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗದಂತೆ ಸರ್ಕಾರವೇ ಸೂಚಿಸುತ್ತದೆ ಎಂದು ಹೇಳಿದ್ದಾರೆ.
ಅದು ಅವರ ನೀತಿಯಾಗಿದೆ. ನಾನು ವಿದೇಶಕ್ಕೆ ಹೋಗುವಾಗ ಅಥವಾ ವಿದೇಶದ ಗಣ್ಯರು ಇಲ್ಲಿಗೆ ಬರುವಾಗ ಅದನ್ನೇ ಮಾಡುತ್ತಾರೆ. ನಿಮ್ಮನ್ನು ಭೇಟಿಯಾಗದಂತೆ ಸರ್ಕಾರದ ಸೂಚನೆಯಿದೆ ಎಂಬ ಸಂದೇಶ ನನಗೆ ಬರುತ್ತದೆ ಎಂದು ರಾಹುಲ್ ಹೇಳಿದ್ದಾರೆ.
ವಿದೇಶದ ಗಣ್ಯರು ವಿರೋಧ ಪಕ್ಷದ ನಾಯಕರೊಂದಿಗಿನ ಸಭೆಯ ಮಹತ್ವವನ್ನು ಒತ್ತಿ ಹೇಳಿರುವ ರಾಹುಲ್, ನಾವು ಕೂಡ ದೇಶವನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿದ್ದಾರೆ.
ರಾಹುಲ್ ಹೇಳಿಕೆಯನ್ನು ಬೆಂಬಲಿಸಿರುವ ಸೋದರಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ಇದೇ ಕಾರಣಕ್ಕಾಗಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.