ADVERTISEMENT

ಕೋವಿಡ್-19: ಪುದುಚೇರಿಯ ಮಾಜಿ ಶಾಸಕ, ಎನ್‌ಆರ್ ಕಾಂಗ್ರೆಸ್‌ ನಾಯಕ ವಿ ಬಾಲನ್ ಸಾವು

ಏಜೆನ್ಸೀಸ್
Published 28 ಜುಲೈ 2020, 10:06 IST
Last Updated 28 ಜುಲೈ 2020, 10:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪುದುಚೇರಿ: ಪುದುಚೇರಿಯ ಮಾಜಿ ಶಾಸಕ ಮತ್ತು ಎನ್‌ಆರ್‌ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ವಿ. ಬಾಲನ್ ಅವರು ಕೊರೊನಾ ವೈರಸ್ ಸೋಂಕಿನಿಂದಾಗಿ ಮಂಗಳವಾರ ಸಾವಿಗೀಡಾಗಿದ್ದಾರೆ.

68 ವರ್ಷದ ಬಾಲನ್ ಅವರಿಗೆ ಪತ್ನಿ, ಮಗ, ಮಗಳು, ಅಳಿಯ ಮತ್ತು ಮೊಮ್ಮಕ್ಕಳು ಇದ್ದಾರೆ.

ಕಾಮರಾಜ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಕೋವಿಡ್-19 ಸೋಂಕು ತಗುಲಿತ್ತು. ಬಳಿಕ ಅವರನ್ನು ಜುಲೈ 23 ರಂದು ಶ್ರೀ ಮನಕುಲ ವಿನಯಾಗರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಐದು ದಿನಗಳಿಂದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಧ್ಯರಾತ್ರಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ. ಅವರಿಗೆ ಕೋವಿಡ್-19 ನ್ಯುಮೋನಿಯಾ, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ದೀರ್ಘಕಾಲದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು.

ಬಾಲನ್ ಅವರು ವಿಧಾನಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ನಲ್ಲಿ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ಅವರು ನಂತರ ಟಿಎಂಸಿ, ಹಿರಿಯ ನಾಯಕ ಪಿ ಕಣ್ಣನ್ ಅವರ ಪಿಎಂಸಿಗೆ ಸೇರ್ಪಡೆಯಾಗಿದ್ದರು. ಪಿಎಂಸಿ ಪಕ್ಷವು ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡ ನಂತರ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದ ಅವರು, 2011 ರಲ್ಲಿ ಎನ್ ರಂಗಸ್ವಾಮಿ ಅವರು ಎನ್‌ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದಾಗ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಕರುವಾಡಿಕಪ್ಪಂನಲ್ಲಿರುವ ವಿದ್ಯುತ್ ಶವಾಗಾರದಲ್ಲಿ ಕೋವಿಡ್-19 ಶಿಷ್ಟಾಚಾರದ ಪ್ರಕಾರ ಅವರ ಅಂತ್ಯಕ್ರಿಯೆ ಮಾಡಲಾಗುವುದು ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.