ADVERTISEMENT

ಕೇರಳ | ಕಣ್ಣೂರು ಸ್ಫೋಟ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಪಿಟಿಐ
Published 6 ಏಪ್ರಿಲ್ 2024, 10:54 IST
Last Updated 6 ಏಪ್ರಿಲ್ 2024, 10:54 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಣ್ಣೂರು (ಕೇರಳ): ಕಣ್ಣೂರು ಜಿಲ್ಲೆಯ ಪಾನೂರು ಬಳಿ ನಡೆದಿದ್ದ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಸಂಭವಿಸಿದ್ದ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಬಂಧಿತ ಆರೋಪಿಗಳು ಸೇರಿದಂತೆ ಸ್ಫೋಟದಲ್ಲಿ ಮೃತಪಟ್ಟ ವ್ಯಕ್ತಿ ಹಾಗೂ ಗಾಯಗೊಂಡವರು ಸಿಪಿಐ(ಎಂ) ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಇದನ್ನು ಪಕ್ಷ ನಿರಾಕರಿಸಿದೆ.

ಶೆಬಿನ್‌ ಲಾಲ್‌, ಕೆ. ಅತುಲ್‌, ಕೆ. ಕೆ ಅರುಣ್‌ ಮತ್ತು ಸಾಯೂಜ್‌ ಬಂಧಿತ ಆರೋಪಿಗಳು. ಪಾಲಕ್ಕಾಡ್‌ನಿಂದ ಪಕ್ಕದ ತಮಿಳುನಾಡಿನ ಕೊಯಮತ್ತೂರಿಗೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಆರೋಪಿ ಸಾಯೂಜ್‌ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡಿರುವ ವಿನೀಶ್‌, ವಿನೋದ್‌ ಮತ್ತು ಅಶ್ವಂತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸ್ಫೋಟದಲ್ಲಿ ಭಾಗಿಯಾಗಿರುವವರಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಪಕ್ಷದ ಸದಸ್ಯರ ಮೇಲೆ ಅವರು ಹಲ್ಲೆ ನಡೆಸಿದ್ದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ. ವಿ ಗೋವಿಂದನ್‌ ತಿಳಿಸಿದ್ದಾರೆ.

ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸಲು ಸಿಪಿಐ(ಎಂ) ಕಾರ್ಯಕರ್ತರು ಬಾಂಬ್‌ ತಯಾರಿಸುತ್ತಿದ್ದಾರೆ ಎಂಬ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಆರೋಪದ ಕುರಿತು ಪ್ರತಿಕ್ರಿಯಿಸಿದ ಗೋವಿಂದನ್‌, ‘ಚುನಾವಣಾ ಸಮಯದಲ್ಲಿ ಬಾಂಬ್‌ಗಳನ್ನು ಅಥವಾ ಅಸ್ತ್ರಗಳನ್ನು ತಯಾರಿಸುವ ಅಗತ್ಯ ಪಕ್ಷಕ್ಕಿಲ್ಲ. ಪಕ್ಷದ ವಿರುದ್ಧ ಸುಳ್ಳು ಪ್ರಚಾರ ಮಾಡುವ ಉದ್ದೇಶದಿಂದ ಈ ರೀತಿಯ ಆರೋಪಗಳನ್ನು ಮಾಡಲಾಗುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.