ಮುಂಬೈ: ಒಡಹುಟ್ಟಿದ ನಾಲ್ಕು ಮಕ್ಕಳನ್ನು ಅಪರಿಚಿತ ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದರು.
ಜಿಲ್ಲೆಯ ರಾವೆರ್ ತಾಲೂಕಿನ ಬೊರ್ಖೆಡಾ ಶಿವರ್ ಹಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದ್ದು, ಜಮೀನಿನಲ್ಲಿರುವ ಮನೆಯೊಂದರಲ್ಲಿ ರಕ್ತದ ಮಡುವಿನಲ್ಲಿ ಮಕ್ಕಳ ಶವ ದೊರಕಿದೆ.
‘ಮಕ್ಕಳ ಪಾಲಕರು ತಮ್ಮ ಹಿರಿಯ ಮಗನೊಂದಿಗೆ ಕುಟುಂಬದ ಸದಸ್ಯರೊಬ್ಬರ ‘ದಶಕ್ರಿಯಾ’ಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಜಮೀನಿನ ಮಾಲೀಕ ಮನೆಗೆ ತೆರಳಿದ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದ್ದು, ತಕ್ಷಣವೇ ಹಳ್ಳಿಯ ಜನರಿಗೆ ಹಾಗೂ ಪೊಲೀಸರಿಗೆ ಅವರು ಮಾಹಿತಿ ನೀಡಿದ್ದರು. ಸಂಗೀತ(13), ರಾಹುಲ್ (11), ಅನಿಲ್(8) ಹಾಗೂ ನಾನಿ(6) ಮೃತಪಟ್ಟ ಮಕ್ಕಳು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.
‘ಮಕ್ಕಳ ಕುತ್ತಿಗೆಯಲ್ಲಿ ಆಳವಾದ ಗಾಯಗಳಿದ್ದು, ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅಪರಿಚಿತ ವ್ಯಕ್ತಿಯ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.