ನೋಯ್ಡಾ: ಭೀಮ್ ಆರ್ಮಿಯ ನಾಯಕ ಚಂದ್ರಶೇಖರ್ ಆಜಾದ್ ಅವರ ಆಜಾದ್ ಸಮಾಜ್ ಪಕ್ಷವು ಉತ್ತರ ಪ್ರದೇಶ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ಮತ್ತು ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡುವುದಾಗಿ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.
‘ಪಕ್ಷವು ಅಧಿಕಾರಕ್ಕೆ ಬಂದರೆ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತದೆ. ಕಬ್ಬು ಬೆಳೆಗಾರರಿಗೆ ಕಬ್ಬು ಪೂರೈಸಿದ 10 ದಿನಗಳಲ್ಲಿ ಹಣ ಪಾವತಿ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಕೃಷಿ ಉಪಕರಣಗಳ ಖರೀದಿಯಲ್ಲಿ ಶೇ 50ರಷ್ಟು ಸಹಾಯಧನ ನೀಡಲಾಗುವುದು’ ಎಂದು ಹೇಳಿದ್ದಾರೆ.
‘ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಸಂಪೂರ್ಣ ಬದಲಾವಣೆ ತರಲಾಗುವುದು. ಎಲ್ಲರಿಗೂ ಉಚಿತ ವೈದ್ಯಕೀಯ ಸೇವೆ ನೀಡಲಾಗುವುದು. ಎಲ್ಲಾ ಜಿಲ್ಲೆಗಳಲ್ಲಿ ಕೃಷಿ ಮಾರುಕಟ್ಟೆಗಳನ್ನು ಆರಂಭಿಸುತ್ತೇವೆ. ಗೊಬ್ಬರ ಮತ್ತು ಬಿತ್ತನೆ ಬೀಜಗಳಿಗೆ ಶೇ 50ರಷ್ಟು ಸಹಾಯಧನ ನೀಡುತ್ತೇವೆ’ ಎಂದು ಅವರು ಹೇಳಿದ್ದಾರೆ.
‘ರಾಜ್ಯದಲ್ಲಿ 80 ಲಕ್ಷ ಉದ್ಯೋಗ ಸೃಷ್ಟಿಸುತ್ತೇವೆ. ಸಿ ಮತ್ತು ಡಿ ವರ್ಗದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಗುತ್ತಿಗೆ ನೌಕರರನ್ನು ಕಾಯಂ ಮಾಡಲಾಗುತ್ತದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ನೌಕರಿಯನ್ನು ಕಾಯಂ ಮಾಡಲಾಗುತ್ತದೆ ಮತ್ತು ಅವರ ಮಾಸಿಕ ವೇತನವನ್ನು ₹10,000ಕ್ಕೆ ಏರಿಕೆ ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.